Aug 25, 2015

ಮಂಗಳೂರಿನ ಮತಿಗೆಟ್ಟ ಹುಡುಗರು.

Ashok K R
ದಕ್ಷಿಣ ಕನ್ನಡದಲ್ಲಿ ಬಿಜೆಪಿಯದೇ ಪಾರುಪತ್ಯವಿತ್ತು. ಬಿಜೆಪಿ ಬೆಂಬಲಿತ ಸಂಘಪರಿವಾರದ ವಿವಿಧ ಶಾಖೆಗಳ ಆಟೋಟಾಪಗಳು, ಸಾಮಾನ್ಯ ಜನರಿಗೆ ವಿನಾಕಾರಣವಾಗಿ ಅವರು ನೀಡಿದ ತೊಂದರೆ, ಅದರ ಜೊತೆಜೊತೆಗೇ ಬೆಳೆದ ಮುಸ್ಲಿಂ ಮೂಲಭೂತವಾದಿಗಳ ಕಾಟವೆಲ್ಲವೂ ಸೇರಿ ಜನರನ್ನು ಜಿಗುಪ್ಸೆಗೆ ತಳ್ಳಿತ್ತು. ಆ ಜಿಗುಪ್ಸೆಯ ಫಲವೆಂಬಂತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇಡೀ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು, ಸುಳ್ಯ ಕ್ಷೇತ್ರವೊಂದನ್ನು ಹೊರತುಪಡಿಸಿ. ಓ! ಕಾಂಗ್ರೆಸ್ ಬಂತು, ಅದರಲ್ಲೂ ಸಿದ್ಧರಾಮಯ್ಯನಂತಹ 'ಸಮಾಜವಾದಿ' 'ಅಹಿಂದ' ನಾಯಕ ಈಗ ಮುಖ್ಯಮಂತ್ರಿ. ಇನ್ನೇನು ಇಡೀ ದಕ್ಷಿಣ ಕನ್ನಡ ಶಾಂತಿಯ ಬೀಡಾಗಿಬಿಡುತ್ತದೆ ಎಂದುಕೊಂಡಿರಾದರೆ ಅದು ಖಂಡಿತ ತಪ್ಪು. ತಪ್ಪೆಂದು ನಿರೂಪಿಸಲು ಮತ್ತೆ ಮತ್ತೆ ಅನೈತಿಕ ಪೋಲೀಸ್ ಗಿರಿಯಂತಹ ಕಾರ್ಯಗಳು ನಡೆಯುತ್ತಲೇ ಇವೆ. 
ಮುಸ್ಲಿಮನೊಬ್ಬ ಪರಿಚಯದ ಹಿಂದೂ ಹುಡುಗಿಯೊಂದಿಗೆ ಹೋಗುವುದು, ಹಿಂದೂವೊಬ್ಬ ಪರಿಚಯದ ಮುಸ್ಲಿಂ ಹುಡುಗಿಯೊಟ್ಟಿಗೆ ಹೋಗುವುದು ಇಲ್ಲಿ ಧರ್ಮದ್ರೋಹದ ಅಪರಾಧ! ಇಂತವರ ವಿರುದ್ಧ ಮಾತನಾಡಿದರೆ ಅದು ದೇಶದ್ರೋಹಕ್ಕೆ ಸಮ! ನಿನ್ನೆ ದಿನ ಮುಸ್ಲಿಂ ಯುವಕೊನೊಬ್ಬನನ್ನು ನಡುಬೀದಿಯಲ್ಲಿ ಬಟ್ಟೆ ಕಳಚಿ ಕಂಬಕ್ಕೆ ಕಟ್ಟಿ ಹೊಡೆಯಲಾಗಿದೆ. ಕಾರಣ ಆತ ಹಿಂದೂ ಹುಡುಗಿಯೊಟ್ಟಿಗೆ ಹೋಗುತ್ತಿದ್ದ. ಲವ್ ಜಿಹಾದ್ ಎಂಬ ಅದೃಶ್ಯ ಭೀತಿಯನ್ನು ನೈಜವಾಗಿಸಲು ಹಿಂದೂ ಮೂಲಭೂತವಾದಿಗಳು ಇಂತಹ ಕೃತ್ಯಕ್ಕೆ ಕೈಹಾಕುತ್ತಾರಾ? ಸಹಪಾಠಿಗಳೂ ಮಾತನಾಡದಂತಹ ಸ್ಥಿತಿಗೆ ಮಂಗಳೂರು ತಲುಪಿರುವುದಾದರೂ ಯಾಕೆ?
ಮೇಲಿನ ಚಿತ್ರ ಗಮನಿಸಿ, ಆ ಮುಸಲ್ಮಾನನನ್ನು ಹಿಡಿದುಕೊಂಡಿರುವ ವ್ಯಕ್ತಿ ಮತ್ತವನ ಹಿಂದೆ ನಿಂತು ಮೊಬೈಲಿನಲ್ಲಿ ಅದನ್ನು ಸೆರೆಹಿಡಿಯುತ್ತಿರುವ ವ್ಯಕ್ತಿಯನ್ನು ನೋಡಿ. ಸರಿಯಾಗಿ ಮೀಸೆಯೂ ಚಿಗುರದ ಎಳೆಯ ಹುಡುಗರವರು. ಅಬ್ಬಬ್ಬಾ ಎಂದರೆ ಯಾವುದೋ ಕಾಲೇಜಿನಲ್ಲಿ ಓದುತ್ತಿರುವವರು. ಇಂತಹ ಹುಡುಗರಿಗೆ ಕೋಮುನಂಜನ್ನು ತುಂಬುತ್ತಿರುವವರಾರು? ಆ ಕೋಮು ವಿಷವನ್ನು ತುಂಬುವ ವ್ಯಕ್ತಿಗಳು ದೊಡ್ಡ ದೊಡ್ಡ ಭಾಷಣ ಬಿಗಿದು ಬೆಚ್ಚಗೆ ಮನೆ ಸೇರುತ್ತಾರೆ. ವಿಷದ ನಂಜೇರಿದ ಈ ಯುವಕರು - ಯುವಕರೂ ಅಲ್ಲ ಹುಡುಗರು - ಬೀದಿಯಲ್ಲಿ ಓಡಾಡುತ್ತಿದ್ದ ಗೆಳೆಯರಿಬ್ಬರನ್ನೂ ಹಿಡಿದು ಚಚ್ಚುತ್ತಾರೆ. ಕೊನೆಗೆ ಜೈಲು ಪಾಲಾಗುವ ಸಂದರ್ಭ ಬಂದರೆ ಅದು ಈ ಹುಡುಗರಿಗೇ ಹೊರತು ಭೀಕರ ಭಾಷಣ ಕುಟ್ಟುವವರಿಗಲ್ಲ.
ಅಂದಹಾಗೆ ಕಾಂಗ್ರೆಸ್ ಸರಕಾರ ಬಂದ ಮೇಲೂ ಇದು ಯಾಕೆ ನಡೆಯುತ್ತಿದೆ ಎಂದಿರಾ? ಬಿಜೆಪಿ ಮಂಗಳೂರಿನಲ್ಲಿ ಉಗ್ರ ಹಿಂದೂ ಮೂಲಭೂತವಾದ ನಡೆಸಿದರೆ ಕಾಂಗ್ರೆಸ್ ನಡೆಸುವುದು ಸೌಮ್ಯ ಹಿಂದೂ ಮೂಲಭೂತವಾದ.... ತನ್ನಲ್ಲಿರುವ ಅಪಾರ ಪ್ರಮಾಣದ ನೈಸರ್ಗಿಕ ಸೌಂದರ್ಯದಿಂದ ಗಮನ ಸೆಳೆಯಬೇಕಿದ್ದ ಮಂಗಳೂರು ಮತಿಗೆಟ್ಟವರ ಕಾರಣದಿಂದಲೇ ಸುದ್ದಿಯಾಗುತ್ತಿರುವುದು ಬೇಸರದ ಸಂಗತಿ.

No comments:

Post a Comment