Dec 25, 2015

ಅಬ್ಬರದ ವೈಭವಕ್ಕೆ ಬೆದರಿದ ಕತೆ

ಯಶ್ ಅಭಿನಯದ ಬಹಳಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದ್ದ ‘ಮಾಸ್ಟರ್ ಪೀಸ್’ ಚಿತ್ರ ಇಂದು ತೆರೆಕಂಡಿದೆ. ಬುಕ್ ಮೈ ಶೋನಲ್ಲಿ ಒಂದು ದಿನ ಮೊದಲೇ ಏಳು ಸಾವಿರ ಟಿಕೇಟುಗಳು ಮಾರಾಟವಾದ ದಾಖಲೆ, ಕರ್ನಾಟಕದಾದ್ಯಂತ ಮುನ್ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಂಡಿರುವ, ಸಂಭಾಷಣೆಕಾರನಾಗಿ ಖ್ಯಾತಿ ಪಡೆದಿದ್ದ ಮಂಜು ಮಾಂಡವ್ಯ ನಿರ್ದೇಶನದ ಮೊದಲ ಚಿತ್ರವೆಂಬ ಹೆಗ್ಗಳಿಕೆಯ ಮಾಸ್ಟರ್ ಪೀಸ್ ಹೇಗಿದೆ? ಚಿತ್ರದ ನಿರೀಕ್ಷೆ ಹೆಚ್ಚಲು ಯಶ್ ಅಭಿನಯದ ಚಿತ್ರಗಳು ಸಾಲು ಸಾಲು ಗೆದ್ದಿದ್ದು, ಮಾಸ್ಟರ್ ಪೀಸ್ ಚಿತ್ರದ ಮೊದಲ ಟ್ರೇಲರಿನಲ್ಲಿ ಭಗತ್ ಸಿಂಗ್ ವೇಷದಲ್ಲಿ ಯಶ್ ಮಿಂಚಿದ್ದು, ಮಾಸ್ಟರ್ ಪೀಸ್ ಚಿತ್ರದ ಅಣ್ಣಂಗೇ ಲವ್ ಆಗಿದೆ ಹಾಡಿನ ಯಶಸ್ಸು ಕಾರಣ. ಚಿತ್ರ ನಿರೀಕ್ಷಿತ ಮಟ್ಟ ಮುಟ್ಟುತ್ತದೆಯಾ?

ಹೊಸ ನಿರ್ದೇಶಕನ ಮೊದಲ ಸಿನಿಮಾದಲ್ಲಿ ಕತೆಯಲ್ಲಿ ಹೊಸತನವನ್ನು ನಿರೀಕ್ಷಿಸುವುದು ಸಹಜ. ತುಂಬ ಹೊಸತನವಿಲ್ಲದ ಕತೆಯನ್ನು ಆಯ್ದುಕೊಂಡಿದ್ದಾರೆ ನಿರ್ದೇಶಕರು. ಒಬ್ಬ ಉಡಾಳ ಹುಡುಗ, ರೌಡಿ ಎಲಿಮೆಂಟೆಂದು ಕರೆಸಿಕೊಳ್ಳಬೇಕೆಂಬ ಹಪಾಹಪಿ ಇರುವಾತ. ಬಹಳಷ್ಟು ಹುಡುಗರಿಗೆ ಒಂದು ಹಂತದಲ್ಲಿ ರೌಡಿ ಎಲಿಮೆಂಟು, ಅಣ್ಣ, ಭಾಯ್ ಅಂತೆಲ್ಲ ಕರೆಸಿಕೊಳ್ಳುವ ಚಟವಿರುತ್ತದೆ. ಕೆಲವರಿಗೆ ಆ ಚಟ ಶಾಲೆ ಮುಗಿಸುವಷ್ಟರಲ್ಲಿ ಮುಗಿದರೆ ಹಲವರಿಗೆ ಪಿಯುಸಿಯಲ್ಲಿ ಮುಗಿಯುತ್ತದೆ. ಎಲ್ಲೋ ಕೆಲವರಿಗೆ ಡಿಗ್ರಿಗೆ ಸೇರಿದರೂ ರೌಡಿಯಾಗುವ ಆಸೆ ಬತ್ತಿರುವುದಿಲ್ಲ. ಅಂತಹ ವ್ಯಕ್ತಿತ್ವ ಚಿತ್ರದ ನಾಯಕ ‘ಯುವ’ನದ್ದು. ಅಣ್ಣನೆನ್ನಿಸಿಕೊಳ್ಳುವ ಭರದಲ್ಲಿ ನಾಯಕನೆದುರಿಸುವ ಸವಾಲುಗಳು, ಮಗನನ್ನು ದೇಶಪ್ರೇಮಿ ಮಾಡಬೇಕೆನ್ನುವ ನ್ಯಾಯಾಲಯದಲ್ಲಿ ಕೆಲಸ ಮಾಡುವ ತಾಯಿ (ಸುಹಾಸಿನಿ) ರೌಡಿ ಮಗನ ಬಗ್ಗೆ ಬೆಳೆಸಿಕೊಳ್ಳುವ ದ್ವೇಷ ಮತ್ತು ಆ ದ್ವೇಷ ಹೇಗೆ ಪ್ರೀತಿಯಾಗಿ ಪರಿವರ್ತನೆಯಾಗುತ್ತದೆ ಎನ್ನುವುದೇ ಚಿತ್ರದ ಪ್ರಮುಖ ಕತೆ. ಹಲವು ಸಾಧ್ಯತೆಗಳಿದ್ದ ಕತೆ ಹೀರೋಯಿಸಮ್ಮಿನ ಸೂತ್ರಕ್ಕೆ ಸಿಲುಕಿ ನಲುಗಿ ಹೋಗಿದೆ. ಒಂದು ಲವ್ ಸ್ಟೋರಿ ಇಲ್ಲದಿದ್ದರೆ ಸಿನಿಮಾ ಪೂರ್ಣವಾಗುವುದಿಲ್ಲ ಎನ್ನುವ ಕಾರಣಕ್ಕೆ ಹೀರೋಯಿನ್ ಇದ್ದಾಳೆ, ಚಿಕ್ಕ ಪಾತ್ರವಾದರೂ ಚೊಕ್ಕವಾಗಿ ಅಭಿನಯಿಸಿ ಮನಗೆಲ್ಲುತ್ತಾಳೆ ನಾಯಕಿ ಶಾನ್ವಿ ಶ್ರೀವಾಸ್ತವ್. ಯಶ್ ನ ಪ್ರಭಾವಳಿಯನ್ನು ಮೀರಿ ಬೆಳೆವ ಪಾತ್ರದಲ್ಲಿ ಚಿಕ್ಕಣ್ಣ. ರೌಡಿ ಎಲಿಮೆಂಟಿನ ಸಹಾಯದಿಂದ ಗೆಲ್ಲುವ ನೂರ್ ಅಹಮದ್ ಪಾತ್ರದಲ್ಲಿ ಅಚ್ಯುತ್; ಅಚ್ಯುತ್ ಅಭಿನಯದ ಬಗ್ಗೆ ಕಮೆಂಟಿಸುವ ಅಗತ್ಯವಿಲ್ಲ. ಮೊದಲಾರ್ಧವಿಡೀ ನಾಯಕನೊಳಗಿನ ರೌಡಿ ಎಲಿಮೆಂಟನ್ನು ವಿಜ್ರಂಭಿಸುವ ಕೆಲಸ. ನನ್ನ ಫೋಟೋ ದೊಡ್ಡದಾಗಿ ಹಾಕಿಲ್ಲ ಎಂದು ಸಂಪಾದಕನ ಕೈಚುಚ್ಚುವ ನಾಯಕ, ರಾಜಕಾರಣಿಯೊಬ್ಬನ ಗೆಲುವಿಗೆ ಹಣ ಹಂಚುವ ಐಡಿಯಾ ಕೊಡವ ನಾಯಕ, ಹಣ ಮಾಡಲು ಶಾರ್ಟು ಕಟ್ಟುಗಳನ್ನುಡುಕುವ ನಾಯಕ – ಒಟ್ಟಾರೆ ಮೊದಲಾರ್ಧದಲ್ಲಿ ಯಶ್ ನೇ ಖಳನಾಯಕ! ಮೊದಲಾರ್ಧದ ಖಳನಾಯಕನನ್ನು ಎರಡನೇ ಅರ್ಧದಲ್ಲಿ ನಾಯಕನನ್ನಾಗಿ ಮಾಡಲು ಡ್ರಗ್ ಮಾಫಿಯಾದ ಬಾಸ್ ರವಿಶಂಕರ್ ಪ್ರವೇಶವಾಗುತ್ತದೆ. 

ರವಿಶಂಕರನ ಸಾಮ್ರಾಜ್ಯವನ್ನು ಮಟ್ಟ ಹಾಕಲು ನಂತರದ ಚಿತ್ರ ಮೀಸಲು. ಮಾಸ್ ಪಿಚ್ಚರುಗಳಲ್ಲೂ ಮೊದಲರ್ಧ ಬಿಲ್ಡಪ್ಪು ನಂತರ ಕತೆ ಎನ್ನುವ ಸೂತ್ರವಿರುತ್ತದೆ. ಇಲ್ಲಿ ಎರಡನೇ ಅರ್ಧವೂ ಬಿಲ್ಡಪ್ಪುಗಳಿಂದಲೇ ತುಂಬಿ ಹೋಗಿದೆ. ಫೈಟಿನ ಮೇಲೆ ಫೈಟುಗಳಿವೆ, ಒಂದೆರಡು ವಿಭಿನ್ನವಾಗಿವೆ. ಆದರೂ ಎಷ್ಟೂಂತ ಬಿಲ್ಡಪ್ಪುಗಳನ್ನು ನೋಡುವುದು. ಚಿಕ್ಕಣ್ಣ ಇಲ್ಲದಿದ್ದರೆ ಯಶ್ ನನ್ನು ತಡೆದುಕೊಳ್ಳುವುದು ಕಷ್ಟವಾಗಿಬಿಡುತ್ತಿತ್ತು! ರೌಡಿ ಎಲಿಮೆಂಟು ಬದಲಾಗುವುದಿಲ್ಲ, ತನ್ನ ರೌಡಿ ಎಲಿಮೆಂಟಿನಿಂದಲೇ ಒಳ್ಳೆಯವನೆಂಬ ಹೆಸರು ಗಳಿಸಿಬಿಡುತ್ತಾನೆ! ರೌಡಿಯ ಬೆಂಬಲಿಗರನ್ನು ಕಂಡ ತಾಯಿ ಅದನ್ನು ಭಗತ್ ಸಿಂಗ್ ಗೆ ಸಿಕ್ಕ ಬೆಂಬಲ ಎಂಬಂತೆ ಕಲ್ಪಿಸಿಕೊಳ್ಳುವುದು ಕಾಮಿಡಿಯಾ ಟ್ರ್ಯಾಜಿಡಿಯಾ ಗೊತ್ತಾಗುವುದಿಲ್ಲ. ಹಾಡುಗಳು ಚಿತ್ರದ ವೇಗಕ್ಕೆ ಪೂರಕವಾಗಿವೆ, ಮೂರು ತಿಂಗಳುಗಳಿಗಿಂತ ಹೆಚ್ಚಾಗಿ ತಲೆಯಲ್ಲುಳಿಯುವುದಿಲ್ಲ. ಚಿತ್ರದ ವೈಭವಕ್ಕೆ ಯಾವುದೇ ಕೊರತೆಯುಂಟುಮಾಡಿಲ್ಲ ನಿರ್ಮಾಪಕರಾದ ವಿಜಯ್ ಕಿರಗಂದೂರು. ಸಂಭಾಷಣೆಕಾರ ನಿರ್ದೇಶಕನಾಗಿರುವುದರಿಂದ ಪಂಚಿಂಗ್ ಡೈಲಾಗುಗಳು ಬಹಳಷ್ಟಿವೆ, ಕೆಲವೊಂದೆಡೆ ಮೌನದ ಜಾಗವನ್ನೂ ಮಾತು ಆವರಿಸಿಕೊಂಡುಬಿಟ್ಟಿದೆ. ಮೌನಕ್ಕಿರುವ ಬೆಲೆ ಚಿತ್ರದ ಪ್ರಾರಂಭದಲ್ಲಿ ಒಂದು ಪುಟ್ಟ ತುಣುಕಾಗಿ ಬರುವ ಭಗತ್ ಸಿಂಗ್ ನ ಕತೆಯಲ್ಲಿ ಗೋಚರವಾಗುತ್ತದೆ. ನಂತರ ಮಾತಿನದ್ದೇ ಅಬ್ಬರ.

ಚಿತ್ರದ ಬಹುಮುಖ್ಯ ಕೊರತೆಯೆಂದರೆ ಬಿಲ್ಡಪ್ಪುಗಳು! ಚಿತ್ರಕ್ಕೆ ಸಂಬಂಧಪಟ್ಟಂತ ಅನೇಕ ಸಂದರ್ಶನಗಳಲ್ಲಿ ಯಶ್ ಪದೇ ಪದೇ Involvementನ ಬಗ್ಗೆ ಹೇಳಿಕೊಳ್ಳುತ್ತಿದ್ದರು. ಮಾಸ್ಟರ್ ಪೀಸ್ ಚಿತ್ರದಲ್ಲಿ ಯಶ್ ನ ‘ಇನ್ವಾಲ್ವ್ ಮೆಂಟ್’ ಎದ್ದು ಕಾಣುತ್ತದೆ. ಮೊದಲರ್ಧದ ಅನೇಕ ದೃಶ್ಯಗಳು ಅವರ ಹಿಂದಿನ ಚಿತ್ರ ರಾಮಾಚಾರಿಯನ್ನು ನೆನಪಿಸುತ್ತದೆ! ಮಾಧ್ಯಮವನ್ನು ಅವಹೇಳನ ಮಾಡಲು ಆ ಚಿತ್ರದಲ್ಲಿ ಕಾವೇರಿ – ಸುವರ್ಣ ಎಂಬ ಪಾತ್ರವಿತ್ತು. ಈ ಚಿತ್ರದಲ್ಲಿ ಮಾಧ್ಯಮವನ್ನು ಹೀಗಳೆಯುವ ಹತ್ತಲವು ಡೈಲಾಗುಗಳು ಬಂದು ಹೋಗುತ್ತವೆ. ಇಡೀ ಚಿತ್ರವನ್ನು ಯಶ್ ಆವರಿಸಿಕೊಂಡುಬಿಟ್ಟಿರುವುದೇ ಚಿತ್ರಕ್ಕೆ ದೊಡ್ಡ ಶಾಪ. ಬಹುಶಃ ಇದು ಅವರ ಇನ್ವಾಲ್ವ್ ಮೆಂಟಿನ ಕಾರಣಕ್ಕಾಯಿತಾ? ನಟನ ಇನ್ವಾಲ್ವ್ ಮೆಂಟ್ ನಟನೆಯಲ್ಲಿರಬೇಕು, ನೃತ್ಯ ನಿರ್ದೇಶಕನ ಇನ್ವಾಲ್ವ್ ಮೆಂಟ್ ನೃತ್ಯದಲ್ಲಿರಬೇಕು, ಎಲ್ಲದರಲ್ಲೂ ಇನ್ವಾಲ್ವ್ ಆಗುವ ಹಕ್ಕಿರುವುದು ನಿರ್ದೇಶಕರಿಗೆ ಮಾತ್ರ ಎನ್ನುವ ಅಂಶ ಯಶ್ ನ ನೆನಪಿನಲ್ಲಿರದಿದ್ದರೆ ಮುಂದೆ ಅವರು ನಟಿಸುವ ಚಿತ್ರಗಳನ್ನು ನೋಡುವ ಪ್ರೇಕ್ಷಕರಲ್ಲಿ ಅವರ ಅಭಿಮಾನಿಗಳು ಮಾತ್ರ ಇರುತ್ತಾರೆ. ಉಳಿದ ಪ್ರೇಕ್ಷಕರು ಇನ್ ವಾಲ್ವ್ ಆಗುವುದಿಲ್ಲ!
Masterpiece (Kannada movie)
Direction: Manju Mandavya
Starcast: Yash, Shanvi srivastav, chikkanna, suhasini, achyut, avinash, ravishankar
Producer: Vijay kiragandur

No comments:

Post a Comment