ಜೂನ್ 19, 2026

ಇಥೆನಾಲ್‌ ಮಿಶ್ರಿತ ಪೆಟ್ರೋಲಿನ ಸುತ್ತ...


ಡಾ. ಅಶೋಕ್.‌ ಕೆ. ಆರ್.
ಇ – 85 ಪೆಟ್ರೋಲ್‌ ಅನ್ನು ದೆಹಲಿಯಲ್ಲಿ ಅಧಿಕೃತವಾಗಿ ಘೋಷಿಸಿದ ಮೇಲಷ್ಟೇ ಇದೇನಿದು ಇ - 85, ಏನಿದು ಇ - 20 ಪೆಟ್ರೋಲ್‌ ಅಂತ ಹುಡುಕಲಾರಂಭಿಸಿದೆ. ಪೆಟ್ರೋಲಿನಲ್ಲಿ ಎಷ್ಟು ಪ್ರಮಾಣದ ಎಥೆನಾಲ್‌ ಇಂಧನವನ್ನು ಬೆರೆಸುತ್ತೇವೆ ಎನ್ನುವುದರ ಮೇಲೆ "ಇ"ಯ ಪ್ರಮಾಣ ನಿರ್ಧರಿತವಾಗುತ್ತೆ. ಹದಿನೈದು ಪರ್ಸೆಂಟ್‌ ಪೆಟ್ರೋಲಿಗೆ ಎಂಭತ್ತೈದು ಪರ್ಸೆಂಟ್‌ ಎಥೆನಾಲ್‌ ಬೆರೆಸಿದರೆ ಅದು ಇ-85. ಕಳೆದೊಂದು ವರ್ಷದಿಂದ ನಮ್ಮೆಲ್ಲ ಪೆಟ್ರೋಲು ಬಂಕುಗಳಲ್ಲಿ ಇ-20 ಪೆಟ್ರೋಲ್‌ ಮಾತ್ರ ಲಭ್ಯವಿದೆ. ಇದಕ್ಕೂ ಮೊದಲು ಇ-10 ಪೆಟ್ರೋಲ್‌ ಅಥವಾ ಶುದ್ಧ ಪೆಟ್ರೋಲ್‌ ಲಭ್ಯವಿರುತ್ತಿತ್ತು. ಅಂದರೆ ನಾವೀಗ ಬಳಸುತ್ತಿರುವ ಪೆಟ್ರೋಲಲ್ಲಿ ಇಪ್ಪತ್ತು ಪ್ರತಿಶತಃ ಇಥೆನಾಲ್‌ ಇದೆ.

ಇಥೆನಾಲ್‌ ಅನ್ನು ಸಸ್ಯಜನ್ಯ ಮೂಲಗಳಿಂದ ದೇಶದೊಳಗೇ ಉತ್ಪಾದಿಸುವುದರಿಂದ ವಿದೇಶದಿಂದ ಆಮದು ಮಾಡಿಕೊಳ್ಳುವ ಪೆಟ್ರೋಲಿನ ಮೇಲೆ ಅವಲಂಬನೆ ಕಡಿಮೆಯಾಗ್ತದೆ. ಅಷ್ಟರಮಟ್ಟಿಗೆ ಹಣದ ಹೊರಹರಿಯುವಿಕೆ ತಪ್ಪುತ್ತದೆ. ಜೊತೆಗೆ ಇಥೆನಾಲ್‌ ಮಿಶ್ರಿತ ಪೆಟ್ರೋಲ್‌ ಉಂಟುಮಾಡುವ ಮಾಲಿನ್ಯದ ಪ್ರಮಾಣವೂ ಕಡಿಮೆ ಇರುತ್ತದಂತೆ. ಆ ಲೆಕ್ಕಕ್ಕೆ ಇಥೆನಾಲ್‌ ಇಲ್ಲದ ಇ-0 ಪೆಟ್ರೋಲಿಗಿಂತ ಇಥೆನಾಲ್‌ ಬೆರೆಸಿದ ಇ-20 ಪೆಟ್ರೋಲಿನ ಬೆಲೆ ಕಡಿಮೆಯಿರಬೇಕಿತ್ತು. ಅದಾಗಿಲ್ಲ. ಲಾಭ ಉಳಿಸಿಕೊಳ್ಳುವುದು ಎಷ್ಟು ಕಾರಣವೋ ಇಥೆನಾಲ್‌ ತಯಾರಿಕೆ ಕೂಡ ಕಡಿಮೆ ಖರ್ಚಿನದ್ದಲ್ಲವಾದ್ದರಿಂದ ವಿದೇಶಿ ಪೆಟ್ರೋಲಿಗೆ ಇಪ್ಪತ್ತು ಪ್ರತಿಶತಃ ಸ್ವದೇಶಿ ಇಥೆನಾಲ್‌ ಬೆರೆಸಿದ ಮೇಲೂ ಬೆಲೆ ಅಷ್ಟೇ ಉಳಿದಿದೆ. ದೆಹಲಿಯಲ್ಲಿ ಇ-85 ಪೆಟ್ರೋಲಿನ ಬೆಲೆ ಮಾತ್ರ ಮಾಮೂಲಿ ಪೆಟ್ರೋಲಿಗಿಂತ ಇಪ್ಪತ್ತು ರುಪಾಯಿಯಷ್ಟು ಕಡಿಮೆಯಿರುತ್ತದೆಂದು ಘೋಷಿಸಿದ್ದಾರೆ.

ಜೂನ್ 18, 2026

ಕರಾವಳಿಯ ಕೋಮು ಗಲಭೆಗಳಲ್ಲಿ ಸತ್ತವರ ಕುಟುಂಬಗಳ ಕಣ್ಣೀರ ಕತೆಗಳು.


 ಡಾ. ಅಶೋಕ್ ಕೆ ಆರ್

ನಾನು ಕನ್ನಡದಲ್ಲಿ ಓದಿದ ವಿಶಿಷ್ಟ ಪುಸ್ತಕಗಳಲ್ಲಿ "ಕರಾವಳಿಯ ರಕ್ತ - ಕಣ್ಣೀರು" ಪ್ರಮುಖ ಸ್ಥಾನವನ್ನೇ ಪಡೆಯುತ್ತದೆ.

ಮತಾಂಧರ ದ್ವೇಷದಿಂದ, ಧಾರ್ಮಿಕ ದ್ವೇಷದ ಕಾರಣದಿಂದ ಕೊಲೆಯೊಂದು ನಡೆದರೆ ಮುಖ್ಯವಾಹಿನಿ ವಾಹಿನಿಗಳಲ್ಲಿ ಸುದ್ದಿಯಾಗುತ್ತದೆ. ಕೊಲೆಯಾದವರ ಸಾಮಾಜಿಕ ಸ್ಥಾನಮಾನ, ರಾಜಕೀಯ ಹಿನ್ನೆಲೆ, ಅಪರಾಧಗಳ ಹಿನ್ನೆಲೆಯ ಆಧಾರದ ಮೇಲೆ ಸುದ್ದಿ ಮೊದಲ ಪುಟದಲ್ಲಿ ದೊಡ್ಡದಾಗಿ ಪ್ರಕಟವಾಗುತ್ತದೋ ಅಥವಾ ಎರಡು ಮೂರನೇ ಪುಟಗಳ ಸ್ಥಳೀಯ ಆವೃತ್ತಿಯಲ್ಲಿ ಪುಟ್ಟ ಕಾಲಂನಲ್ಲಿ ಪ್ರಕಟವಾಗುತ್ತದೋ ಎನ್ನುವುದು ನಿರ್ಧಾರವಾಗುತ್ತದೆ. ಟಿವಿಯಲ್ಲಿ ಹೆಚ್ಚು ಸಮಯ ಸುದ್ದಿಯಾಗಲು ಸಹ ಇದೇ ಮಾನದಂಡಗಳು ಅನ್ವಯ. ರಾಜಕೀಯ ಪಕ್ಷಗಳು ನೇರವಾಗಿ ಅಖಾಡಕ್ಕೆ ಧುಮುಕಿದರೆ ಮತ್ತೊಂದಷ್ಟು ದಿನಗಳ ಕಾಲ ಸುದ್ದಿಯ ಪ್ರಸಾರವಾಗುತ್ತದೆ. 

ಜೂನ್ 4, 2026

ಸಿದ್ಧರಾಮಯ್ಯನವರೀಗ ಮಾಜಿ ಮುಖ್ಯಮಂತ್ರಿ.


ಡಾ. ಅಶೋಕ್.‌ ಕೆ. ಆರ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ನಾ ಮತ‌ ಚಲಾಯಿಸಲು ಪ್ರಮುಖ ಕಾರಣ ಸಿದ್ಧರಾಮಯ್ಯನವರು ಮತ್ತೊಮ್ಮೆ ಸಿಎಂ ಆಗಲಿ ಎಂದು.

ಮಂಡ್ಯದ ಬಹಳಷ್ಟು ಒಕ್ಕಲಿಗ ಗೌಡರು 'ಈ ಕುರುಬ ಎರಡೆರಡು ಸಲ ಮುಖ್ಯಮಂತ್ರಿ ಆಗಿಬಿಟ್ನಲ್ಲ' ಅಂತ ಕೊರಗೋದನ್ನ ನೋಡೋದೇ ಒಂದು ಚೆಂದವಾಗಿತ್ತು! ಕರ್ನಾಟಕದ ಉಳಿದ ಮುಖ್ಯಮಂತ್ರಿಗಳು ಸ್ವರ್ಗವನ್ನೇ ಕರ್ನಾಟಕಕ್ಕೆ ಇಳಿಸಿ ಬಿಟ್ಟಿದ್ದವರಂತೆ ಸಿದ್ಧರಾಮಯ್ಯನವರನ್ನು ಶೋಷಕ ಜಾತಿಯ ಅನೇಕರು ಲೇವಡಿ ಮಾಡುತ್ತಿದ್ದುದಕ್ಕೆ ಜಾತಿ ಕಾರಣವೇ ಹೊರತು ಮತ್ತೇನಲ್ಲ. ಮೇಲ್ ಶೋಷಕ ಜಾತಿಯ ಮಾತಿನ ಶೈಲಿ "ಗತ್ತು" ಅನ್ನಿಸಿಕೊಂಡರೆ ಸಿದ್ಧರಾಮಯ್ಯನವರ ಮಾತಿನ ಶೈಲಿ "ದುರಹಂಕಾರ" ಅನ್ನಿಸಿಕೊಳ್ಳುತ್ತಿತ್ತು. ಇರಲಿ, ನಮ್ಮ ಸಮಾಜದಲ್ಲಿ ಜಾತಿ ಅನ್ನೋದು ನಮ್ಮ ಜೀವಿತಾವಧಿಯಲ್ಲಂತೂ ಅತ್ತಗಿತ್ತಗೂ ಅಲುಗಾಡುವುದಿಲ್ಲ. ಇನ್ನೆರಡಲ್ಲ ಹತ್ತು ತಲೆಮಾರು ಕಳೆಯುವಷ್ಟರಲ್ಲಾದರೂ ಅಲ್ಲಾಡಿದರೆ ಪುಣ್ಯ.

ಜುಲೈ 30, 2025

ಜಾತಿಯೆಂಬ ವಾಸ್ತವ ಮತ್ತು ಒಂದು ಸ್ವೀಕೃತಿಗೆ ಕಾಯುತ್ತಿರುವ ಜನರು...

AI generated representative image
ಡಾ. ಅಶೋಕ್.‌ ಕೆ. ಆರ್
ಊರ ಹೊರಗಿದ್ದ ಕಾಲೋನಿಯ ಆಚೆ ಊರಂಚಿನಲ್ಲಿ ಅಲ್ಲೊಂದಿಲ್ಲೊಂದಂತೆ ಇದ್ದ ಮನೆ ಖರೀದಿಸಿ ಆವಾಗಿವಾಗ ಬರುವುದಕ್ಕೆ ಶುರುಮಾಡಿ ಕೆಲವು ತಿಂಗಳುಗಳಾಗಿತ್ತು. ಮನೆಯಂಗಳದಲ್ಲಿ ಪುಸ್ತಕವೊಂದನ್ನು ಓದುತ್ತಾ ಕುಳಿತಿದ್ದಾಗ ಆ ವ್ಯಕ್ತಿ ಬಂದರು. ಗರಿಗರಿಯಾದ ಹೊಸ ಬಟ್ಟೆ ತೊಟ್ಟುಕೊಂಡಿದ್ದರು. ಅವರ ಅಣ್ಣನ ಮಗನದು ಮದುವೆ – ಕೊಳ್ಳೇಗಾಲದಲ್ಲಿ. ಊರಿಂದಾಗ ಬಸ್ಸು ಹೊರಡುವುದರಲ್ಲಿತ್ತು. ಅಷ್ಟು ದೂರದ ಮದುವೆಗೆ ಕರೆಯಲು ಬಂದಿರಲಿಲ್ಲ. ಮುಂದಿನ ಭಾನುವಾರ ಇಲ್ಲೇ ಇನ್ನೂರು ಅಡಿ ದೂರದಲ್ಲಿ ಅವರ ಅಣ್ಣ ಕಟ್ಟಿಸಿರುವ ಹೊಸ ಮನೆಯೊಂದರ ಮುಂದೆ ಕರ್ನರೆ – ಬೀಗರ ಊಟಕ್ಕೆ ಹೇಳಿ ಹೋಗಲು ಬಂದಿದ್ದರು. ಮುಂದಿನ ವಾರ ಊರಿಗೆ ಬಂದರೆ ಖಂಡಿತ ಬರ್ತೀನಿ ಅಂತೇಳಿದೆ.

ಕರ್ನೆರೆಯ ದಿನ ಹನ್ನೊಂದು ಘಂಟೆಯಷ್ಟೊತ್ತಿಗೆ ಮತ್ತೆ ಬಂದು ನೆನಪಿಸಿದರು. ಬರ್ತೀನಿ ಬಿಡಿ ನೆನಪಿತ್ತು ಅಂತೇಳಿದೆ. ಮಧ್ಯಾಹ್ನದ ಮೇಲೆ ಒಂದಷ್ಟು ಬೇರೆ ಕೆಲಸವಿತ್ತು, ಹಂಗಾಗಿ ಒಂದೂಕಾಲರಷ್ಟೊತ್ತಿಗೆ ಕರ್ನರೆಗೆ ಹೋಗಿ ಊಟ ಮಾಡಿಕೊಂಡು ಹೊರಟುಬಿಡುವ ಎಂದುಕೊಂಡೆ. ಅವರ ಮನೆಯ ಬಳಿ ಹೋದೆ, ಇನ್ನೂ ಮುದ್ದೆ ತಿರುವುತ್ತಿದ್ದದ್ದು ರಸ್ತೆಯಿಂದಲೇ ಕಾಣಿಸುತ್ತಿತ್ತು. ಊಟಕ್ಕಿನ್ನೂ ಕುಳಿತಿರಲಿಲ್ಲ. ಹಂಗೇ ಕಣ್ಣಾಡಿಸಿದೆ. ನನ್ನನ್ನು ಎರಡೆರಡು ಸಲ ಕರೆದು ಹೋಗಿದ್ದವರೂ ಕಾಣಿಸಲಿಲ್ಲ. ಅವರನ್ನು ಬಿಟ್ಟರೆ ಅಲ್ಲಿದ್ದ ಇನ್ಯಾರ ಮುಖ ಪರಿಚಯವೂ ಇಲ್ಲ. ಏನೋ ಊಟ ಈಗಾಗಲೇ ಶುರುವಾಗಿಬಿಟ್ಟಿದ್ದರೆ ಹೋಗಿ ಕುಳಿತು ಊಟ ಮಾಡಿಕೊಂಡು ಹೊರಡಬಹುದಿತ್ತು. ಅವರಲ್ಲಿ ಇದ್ದರೋ ಇಲ್ಲವೋ ಅನ್ನೋದು ಮುಖ್ಯವಾಗಿರಲಿಲ್ಲ! ಈಗಲ್ಲಿ ಹೋಗಿ ಶಾಮಿಯಾನದ ಕೆಳಗೆ ಕೂರಬೇಕು. ಇದ್ಯಾರು ಅಂತ ಗಮನಿಸೋ ಕುತೂಹಲದ ಕಣ್ಣುಗಳಿಗೆ ಆಹಾರವಾಗಬೇಕು. ಯಾಕ್‌ ಬೇಕಪ್ಪ ಸಾವಾಸ ಅಂತ ಹಂಗೇ ಕಾರಿಂದಿಳಿದು ಹೊರಟುಬಿಟ್ಟೆ.

ಜೂನ್ 10, 2025

ಬೆಚ್ಚಿ ಬೀಳಿಸದ "ಸ್ಟೋಲನ್"

ಸ್ಟೋಲನ್ ಚಿತ್ರದ ಒಂದು ದೃಶ್ಯ 
ಡಾ. ಅಶೋಕ್. ಕೆ. ಆರ್
ರೈಲು ನಿಲ್ದಾಣದಲ್ಲಿ ಯುವತಿಯೊಬ್ಬಳ ಮಗು ಕಳ್ಳತನವಾಗ್ತದೆ. ಮಗು ಕದ್ದು ಓಡುತ್ತಿದ್ದವಳು ಅದೇ ತಾನೇ ರೈಲಿನಿಂದ ಇಳಿದ ಯುವಕನೊಬ್ಬನಿಗೆ ಡಿಕ್ಕಿ ಹೊಡೆಯುತ್ತಾಳೆ. ಆ ಯುವಕನ ಮೇಲೇ ಮೊದಲ‌ ಅನುಮಾನ. ಕೊನೆಗೆ ಆ ಯುವಕ ಕಳ್ಳತನಕ್ಕೆ ಸಾಕ್ಷಿಯಾಗುತ್ತಾನೆ. ಮಗು ಕಳೆದುಕೊಂಡ ಯುವತಿ, ಸಾಕ್ಷೀದಾರ ಯುವಕ, ಯುವಕನನ್ನು ಮನೆಗೆ ಕರೆದೊಯ್ಯಲು ಬಂದ ಅವನಣ್ಣ ಕೂಡ ಇಷ್ಟವಿದ್ದೊ ಇಷ್ಟವಿಲ್ಲದೆಯೋ ಮಗುವನ್ನು ಹುಡುಕುವುದರಲ್ಲಿ ತೊಡಗಿಕೊಳ್ಳುತ್ತಾರೆ.

ಡಿಸೆಂ 28, 2024

ಕ್ಯಾಪಿಟಲಿಸಂ ಬಿಟ್ಟು ಬೇರೆ ಆಯ್ಕೆ ನಿಜಕ್ಕೂ ನಮ್ಮ ಮುಂದಿದೆಯೇ?

 

image source: yourdictionary

ಡಾ. ಅಶೋಕ್.‌ ಕೆ. ಆರ್.

ಯಾರಾದರೂ ಎಡಪಂಥೀಯ – ಬಲಪಂಥೀಯ ಅಂತ ಮಾತನಾಡುವಾಗ, ವಾದ ಮಾಡುವಾಗ ನಿಜಕ್ಕೂ ಈಗ ನಮ್ಮಲ್ಲಿ ಎಡಪಂಥೀಯತೆ – ಬಲಪಂಥೀಯತೆ ಅನ್ನುವುದಿದೆಯೇ ಎನ್ನುವ ಪ್ರಶ್ನೆ ನನ್ನಲ್ಲಿ ಮೂಡುತ್ತಲೇ ಇರುತ್ತದೆ. ಈ ರೀತಿಯಾಗಿ ಮಾತನಾಡುವ, ವಾದ ಮಾಡುವ ನಾವೆಲ್ಲರೂ ಬಂಡವಾಳಶಾಹಿ – ಕ್ಯಾಪಿಟಲಿಸ್ಟುಗಳೇ ಅಲ್ಲವೇ ಎನ್ನುವ ಯೋಚನೆ ಸುಳಿಯುತ್ತದೆ. ಅಬ್ಬಬ್ಬಾ ಅಂದರೆ ಒಂಚೂರು ಎಡಕ್ಕಿರುವ ಅಥವಾ ಒಂದಷ್ಟು ಬಲಕ್ಕಿರುವ ಕ್ಯಾಪಿಟಲಿಸ್ಟುಗಳಷ್ಟೇ ಅಲ್ಲವೇ ನಾವು ಬಹುತೇಕರು…

ನರಸಿಂಹರಾವ್‌ ಕಾಲದಲ್ಲಿ, ಮನಮೋಹನ್‌ ಸಿಂಗ್‌ರವರು ಹಣಕಾಸು ಸಚಿವರಾಗಿದ್ದಾಗಿನ ಸಮಯದಲ್ಲಿ ಇಂಡಿಯಾ ಜಾಗತೀಕರಣಕ್ಕೆ ಸಂಪೂರ್ಣವಾಗಿ ತೆರೆದುಕೊಂಡಿತು. ಹಲವು ವರುಷಗಳ ಕಾಲ ವಿಧವಿಧದ ವಿರೋಧಗಳನ್ನು ಈ ಹೊಸ ಆರ್ಥಿಕ ನೀತಿಗಳು ಎದುರಿಸಿತಾದರೂ ಅಂತಿಮವಾಗಿ ಕ್ಯಾಪಿಟಲಿಸಂ ಎನ್ನುವ ಸಿದ್ಧಾಂತವಲ್ಲದ ಸಿದ್ಧಾಂತ ಉಳಿದೆಲ್ಲ ಸಿದ್ಧಾಂತಗಳನ್ನು ಮೀರಿ ಜಯಿಸಲಾರಂಭಿಸಿತು ಎನ್ನುವುದು ತಿರಸ್ಕರಿಸಲಾಗದ ವಾಸ್ತವ.

ಏಪ್ರಿ 18, 2023

ಕಾಡಿನ ನ್ಯಾಯಕ್ಕೆ ವಿರುದ್ಧವಾದ "ದಿ ಎಲಿಫೆಂಟ್ ವಿಸ್ಪರರ್ಸ್"

ಚಿತ್ರಮೂಲ: ಎಕನಾಮಿಕ್ ಟೈಮ್ಸ್
ಡಾ. ಅಶೋಕ್. ಕೆ. ಆರ್

ಕಾಡ ನಡುವಿನಲ್ಲಿ ಮರಿಯಾನೆಯೊಂದು ಹಿಂಡಿನಿಂದ ಬೇರ್ಪಟ್ಟು ಒಂಟಿಯಾಗುತ್ತದೆ. ಆಹಾರ ಹುಡುಕುವ, ನೀರನ್ನರಸುವ ಗುಣಗಳನ್ನು ಹಿಂಡಿನ ಹಿರಿಯರಿಂದ ಇನ್ನೂ ಕಲಿಯದ ಮರಿಯಾನೆಗೆ ಜೀವವುಳಿಸಿಕೊಳ್ಳುವುದು ಕಷ್ಟದ ಸಂಗತಿಯೇ ಸರಿ. ಮರಿಯಾನೆಯ ಕೂಗಾಟ ಅರಣ್ಯ ಇಲಾಖೆಯ ಕಿವಿಗೆ ತಲುಪುತ್ತದೆ. ಕಾಡಿನ ನಿಯಮಗಳಿಂದ ರಕ್ಷಿಸಲ್ಪಟ್ಟ ಈ ಮರಿಯಾನೆಯನ್ನು ಸಾಕುವ ಜವಾಬ್ದಾರಿಯನ್ನು ಇಲಾಖೆಯ ಕೆಲಸಗಾರರಾದ, ಮೂಲತಃ ಆದಿವಾಸಿಗಳಾದ ಇಬ್ಬರಿಗೆ ವಹಿಸಲಾಗುತ್ತದೆ. ಆ ಈರ್ವರ ನಡುವಿನ ವೈಯಕ್ತಿಕ ಸಂಬಂಧ, ಆನೆಯನ್ನು ಸಾಕಿ ಸಲಹುವ ಪರಿ, ಆನೆ ಜೊತೆಗಿನ ಮಮಕಾರದ ಸಂಬಂಧವೇ "ದಿ ಎಲಿಫೆಂಟ್ ವಿಸ್ಪರರ್ಸ್" ಸಾಕ್ಷ್ಯಚಿತ್ರದ ಹೂರಣ. 

ಆಸ್ಕರ್ರಿಗೆ ಭಾರತದಿಂದ ಕಳುಹಿಸಲ್ಪಟ್ಟ ಸಾಕ್ಷ್ಯಚಿತ್ರಕ್ಕೆ ಅತ್ಯುತ್ತಮವೆಂಬ ಪ್ರಶಸ್ತಿಯೂ ದೊರೆತು ಖ್ಯಾತಿಗಳಿಸಿದ ಚಿತ್ರ ನೆಟ್ ಫ್ಲಿಕ್ಸ್ ನಲ್ಲಿ ನೋಡಲು ಲಭ್ಯವಿದೆ. ಆಸ್ಕರ್ ದೊರೆಯುವ ಮುಂಚೆ ಈ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದ್ದೆ. ನೋಡಿದ ಯಾರಿಗಾದರೂ ಕಣ್ಣಂಚಿನಲ್ಲಿ ನೀರು ತರಿಸುವ ಚಿತ್ರವಿದು. ನಾನೂ ಅದಕ್ಕೆ ಹೊರತಲ್ಲ.

ಆಗ 19, 2022

ಎಲ್ಲಕಿಂತ ಜೀವ ಮುಖ್ಯ…

- ಡಾ. ಅಶೋಕ್.‌ ಕೆ. ಆರ್‌

ಪೂರ್ವಿಕಾಳ ಹೆಸರಿನಿಂದ (ಹೆಸರು ಬದಲಿಸಲಾಗಿದೆ) ಫೇಸ್‌ಬುಕ್ಕಿನಲ್ಲಿ ಸ್ನೇಹದ ಕೋರಿಕೆ ಬಂದಿತ್ತು. ನಲವತ್ತು ಚಿಲ್ಲರೆ ಮಂದಿ ಪರಸ್ಪರ ಸ್ನೇಹಿತರ ಪಟ್ಟಿಯಲ್ಲಿದ್ದರು. ಮುಂಚಿನಂತೆ ಬಂದೆಲ್ಲ ಸ್ನೇಹಿತರ ಕೋರಿಕೆಯನ್ನು ಒಪ್ಪಿಕೊಳ್ಳುತ್ತಿರಲಿಲ್ಲವಾದ್ದರಿಂದ ಪೂರ್ವಿಕಾಳ ಪ್ರೊಫೈಲಿನ ಮೇಲೆ ಕ್ಲಿಕ್ಕಿಸಿದೆ. ಸುಳ್ಯದ ವಿದ್ಯಾರ್ಥಿನಿಯ ಫೋಟೋ ಇದ್ದ ಪ್ರೊಫೈಲದು. ಸುಳ್ಯದ ಹಳೆಯ ವಿದ್ಯಾರ್ಥಿಗಳೇ ಪರಸ್ಪರ ಸ್ನೇಹಿತರ ಪಟ್ಟಿಯಲ್ಲಿದ್ದರು. ಸ್ನೇಹದ ಕೋರಿಕೆಯನ್ನು ಒಪ್ಪಿಕೊಂಡ ದಿನದ ನಂತರ ಪೂರ್ವಿಕಾಳ ಪ್ರೊಫೈಲಿನಿಂದ ಮೆಸೆಂಜರ್‌ನಲ್ಲಿ ʻಹಾಯ್‌ʼ ಎಂದೊಂದು ಮೆಸೇಜು ಬಂದಿತ್ತು. ಮೆಸೇಜುಗಳನ್ನು ಆಗಾಗ್ಯೆ ನೋಡುವ ಅಭ್ಯಾಸವಿಲ್ಲದ ಕಾರಣ ಒಂದಷ್ಟು ಸಮಯದ ನಂತರ ʻಹಾಯ್‌ʼ ಎಂದು ಉತ್ತರಿಸಿ ʻಹೇಗಿದ್ದೀಯಪ್ಪ?ʼ ಎಂದು ಇಂಗ್ಲೀಷಿನಲ್ಲಿ ಕೇಳಿದೆ. ಪೂರ್ವಿಕಾ ಕೇರಳದ ಹುಡುಗಿ ಎಂದು ನೆನಪಿತ್ತು. ʻನಾನು ಚೆನ್ನಾಗಿದ್ದೀನಿ. ನೀವು ಹೇಗಿದ್ದೀರಿ?ʼ ಎಂದು ಕೇಳಿದವಳು ನನ್ನ ಮರುತ್ತರಕ್ಕೂ ಕಾಯದೆ ನಿಮ್ಮ ವಾಟ್ಸಪ್‌ ನಂಬರ್‌ ಕಳುಹಿಸಿ ಅಲ್ಲಿಯೇ ಚಾಟ್‌ ಮಾಡುವ ಎಂದು ಕೇಳಿದಳು. ಓಹ್!‌ ಇದು ಅಸಲಿ ಖಾತೆ ಇರಲಿಕ್ಕಿಲ್ಲ ಎಂದರಿವಾಯಿತಾಗ. ಹಳೆಯ ವಿದ್ಯಾರ್ಥಿಗಳು ಯಾವುದಾದರೂ ವಿಷಯದ ಬಗ್ಗೆ ಮಾಹಿತಿ ಕೇಳಲು, ಅಥವಾ ಬಹಳ ವರುಷಗಳ ನಂತರ ಮಾತನಾಡಲು ಫೋನ್‌ ನಂಬರ್‌ ಕೇಳುವುದು ಅಪರೂಪವೇನಲ್ಲ. ಆದರೆ ಚಾಟ್‌ ಮಾಡಲು ವಾಟ್ಸಪ್‌ ನಂಬರ್‌ ಕೇಳುವುದು ಸಾಮಾನ್ಯ ಸಂಗತಿಯೇನಲ್ಲ. ಪರಿಚಿತರ ಫೋಟೋ ಬಳಸಿಕೊಂಡು ನಕಲಿ ಖಾತೆ ಸೃಷ್ಟಿಸಿ ಸ್ನೇಹದ ಕೋರಿಕೆ ಕಳುಹಿಸಿ ಮೆಸೆಂಜರ್‌ನಲ್ಲಿ ʻತುರ್ತು ಅವಶ್ಯಕತೆ ಇದೆ. ಒಂದೈದು ಸಾವಿರ ಗೂಗಲ್‌ ಪೇ ಮಾಡಿʼ ಎಂದು ಬೇಡಿಕೆ ಇಡುವ ಸ್ಕ್ಯಾಮು ಹೆಚ್ಚಿದೆ. ಇಲ್ಲಿ ಹಣದ ಬೇಡಿಕೆಯೂ ಇಲ್ಲದೆ ವಾಟ್ಸಪ್‌ ನಂಬರ್‌ ಕೇಳುತ್ತಿದ್ದಾರಲ್ಲಾ? ಇದ್ಯಾವ ಹೊಸ ಮೋಸದ ಯೋಜನೆಯಿರಬಹುದು ಎಂಬ ಕುತೂಹಲವುಂಟಾಯಿತು. ನವಮೋಸದ ಪರಿ ಹೇಗಿರಬಹುದೆಂದು ತಿಳಿಯಬಯಸುವ ಆಸಕ್ತಿಯಿಂದ ವಾಟ್ಸಪ್‌ ನಂಬರ್‌ ಅನ್ನು ಕಳುಹಿಸಿದೆ. ಮೊದಲ ದಿನ ʻಹಾಯ್‌ʼʻಬಾಯ್‌ʼ ಮೆಸೇಜಿವೆ ಸಂವಹನ ಸೀಮಿತವಾಗಿತ್ತು. ಮಾರನೆಯ ದಿನ ಮತ್ತೇನೂ ಹೆಚ್ಚಿನ ಸಂವಾದಗಳಿಲ್ಲದೆ ಸೀದಾ ಸಾದಾ ವೀಡಿಯೋ ಕರೆ ಮಾಡುವ ಬೇಡಿಕೆ ಅತ್ತಲಿಂದ ಬಂತು. ಇವರ ಮೋಸದ ಹೊಸ ಯೋಜನೆಯ ರೂಪುರೇಷೆ ಸೂಕ್ಷ್ಮವಾಗಿ ಅರಿವಾಯಿತಾದರೂ ಪೂರ್ಣ ಪ್ರಮಾಣದಲ್ಲಿ ತಿಳಿದುಕೊಳ್ಳುವ ಉತ್ಸಾಹವಿನ್ನೂ ಕಡಿಮೆಯಾಗಿರಲಿಲ್ಲ! ʻವೀಡಿಯೋ ಕರೆ ಯಾಕೆ?ʼ ಎಂದು ಮುಗ್ಧನಂತೆ ಕೇಳಿದೆ. ಮೆಸೇಜುಗಳಲ್ಲಿ ನಾನಿನ್ನೂ ಅತ್ತಲಿನವರನ್ನು ನನ್ನ ಹಳೆಯ ವಿದ್ಯಾರ್ಥಿನಿಯೆಂದೇ ತಿಳಿದುಕೊಂಡಿರುವಂತೆ ನಂಬಿಸಿದೆ. ʻನಾನೊಬ್ಳೇ ಇದೀನಿ. ವೀಡಿಯೋ ಕರೆ ಮಾಡಿ. ಬಾತ್‌ರೂಮಿಗೆ ಹೋಗಿ ಕಾಲ್‌ ಮಾಡಿʼ ಎಂದು ನೇರಾನೇರ ಅಶ್ಲೀಲ ವೀಡಿಯೋ ಕರೆಗೆ ಬೇಡಿಕೆ ಬಂತು! ʻಸಾರಿ. ನನಗೆ ಆಸಕ್ತಿಯಿಲ್ಲʼ ಎಂದು ಟೈಪಿಸಿದ್ದನ್ನು ಕಳುಹಿಸುವುದಕ್ಕೆ ಮೊದಲೆಯೇ ವೀಡಿಯೋ ಕರೆ ಬಂದಿತು! ಕಾಲೇಜಿಗೆ ಹೊರಡುತ್ತಿದ್ದವನು ಇವರ ಆಟ ಪೂರ್ತಿಯೇ ನೋಡಿಬಿಡುವ ಎಂದು ಕರೆ ಸ್ವೀಕರಿಸಿದೆ. ಅತ್ತ ಕಡೆ ಹುಡುಗಿಯೊಬ್ಬಳಿದ್ದಳು. ಖಂಡಿತಾ ಸುಳ್ಯದ ವಿದ್ಯಾರ್ಥಿನಿ ಪೂರ್ವಿಕಾಳಲ್ಲ ಅವಳು. ಅತ್ತ ಕಡೆ ಹುಡುಗಿ ಇದ್ದಿದ್ದೂ ಅನುಮಾನವೇ, ಕಂಪ್ಯೂಟರಿನಲ್ಲಿದ್ದ ಹುಡುಗಿಯ ವೀಡಿಯೋ ಒಂದನ್ನು ಬಳಸಿಕೊಂಡಂತನ್ನಿಸಿತು. ಆರೇಳು ಸೆಕೆಂಡುಗಳಲ್ಲಿ ಕರೆ ತುಂಡಾಯಿತು. ʻಬಾತ್‌ರೂಮಿಗೆ ಹೋಗಿ. ಸೆಕ್ಸ್‌ ವೀಡಿಯೋ ಕರೆ ಮಾಡುವʼ ಎಂದು ಬಂದ ಮೆಸೇಜಿಗೆ ಈಗಾಗಲೇ ಟೈಪಿಸಿದ್ದ ʻಸಾರಿ. ನನಗೆ ಆಸಕ್ತಿಯಿಲ್ಲʼ ಎಂಬ ಮೆಸೇಜನ್ನು ಕಳುಹಿಸಿ ಕಾಲೇಜಿಗೆ ಹೊರಟೆ. ಸಂಜೆ ವಾಟ್ಸಪ್ಪಿನಲ್ಲಿ ಪುಟ್ಟ ವೀಡಿಯೋ ಒಂದನ್ನು ಕಳುಹಿಸಿದ್ದರು. ಆರು ಸೆಕೆಂಡಿನ ನನ್ನ ಬೆಳಗಿನ ವೀಡಿಯೋ ಕರೆ ರೆಕಾರ್ಡು ಮುಗಿದ ನಂತರ ಬಚ್ಚಲು ಮನೆಯಲ್ಲಿ ಪುರುಷನೊಬ್ಬ ಜನನಾಂಗ ತೋರಿಸಿರುವ ಮತ್ತೊಂದು ತುಣುಕನ್ನು ಸೇರಿಸಿ ಮಾಡಲಾಗಿದ್ದ ವೀಡಿಯೋ ಅದು. ವೀಡಿಯೋ ಹಿಂದೆಯೇ ಒಂದಷ್ಟು ಸ್ಕ್ರೀನ್‌ಶಾಟುಗಳನ್ನು ಕಳಿಸಿದರು. ಫೇಸ್‌ಬುಕ್ಕಿನ ನನ್ನ ಪ್ರೊಫೈಲಿನಲ್ಲಿದ್ದ ನನ್ನ ನೆಂಟರಿಷ್ಟರ ಕಸಿನ್ಸುಗಳ ಪಟ್ಟಿ ಅದು. ನಾವು ಕೇಳಿದಷ್ಟು ಹಣ ನೀಡದಿದ್ದರೆ ಈ ಪಟ್ಟಿಯಲ್ಲಿರುವ ನಿಮ್ಮ ಕಸಿನ್ಸುಗಳಿಗೆಲ್ಲ ಈ ವೀಡಿಯೋ ಕಳಿಸುತ್ತೀವಿ. ನಿಮ್ಮ ಮಾನ ಮರ್ಯಾದೆ ಹೋಗ್ತದೆ, ಯೋಚನೆ ಮಾಡಿ. ತುರ್ತು ಪ್ರತಿಕ್ರಿಯಿಸಿ ಎಂಬ ಮೆಸೇಜು ಹಿಂದಿ ಭಾಷೆಯಲ್ಲಿ ಬಂದಿತ್ತು. ʻಇದು ನನ್ನ ವೀಡಿಯೋನೆ ಅಲ್ಲ. ಯಾರಿಗಾದರೂ ಕಳಿಸಿಕೊಳ್ಳಿʼ ಎಂದುತ್ತರಿಸಿದೆ. ಕರೆ ಬಂತು. ಸ್ವೀಕರಿಸಿದೆ. ಜೋರು ಹಿಂದಿಯಲ್ಲಿ ಹಣದ ಬೇಡಿಕೆ ಇರಿಸಿದರು. ಪೋಲೀಸರಿಗೆ ದೂರು ನೀಡುವುದಾಗಿ ಬೆದರಿಸಿದೆ. ಯಾವ ಪೋಲೀಸರ ಬಳಿಯಾದರೂ ಹೋಗಿ. ನಮಗೇನೂ ಹೆದರಿಕೆ ಇಲ್ಲ ಎಂದರು. ಯಾರಿಗಾದರೂ ವೀಡಿಯೋ ಕಳಿಸಿಕೊಳ್ಳಿ, ನಿಮ್ಮ ಹಣೆಬರಹ ಎಂದೇಳಿ ಫೋನಿಟ್ಟೆ. ಪಟ್ಟಿಯಲ್ಲಿದ್ದ ಕೆಲವು ಕಸಿನ್ಸುಗಳಿಗೆ ಮೆಸೆಂಜರ್‌ನಲ್ಲಿ ವೀಡಿಯೋ ಕಳುಹಿಸಿದ ಸ್ಕ್ರೀನ್‌ ಶಾಟುಗಳನ್ನು ತೆಗೆದು ನನಗೆ ಕಳುಹಿಸಿ ʻಇನ್ನೂ ಅವರು ವೀಡಿಯೋ ನೋಡಿಲ್ಲ. ದುಡ್ಡು ಕಳುಹಿಸಿದರೆ ವೀಡಿಯೋ ಡಿಲೀಟ್‌ ಮಾಡ್ತೀನಿʼ ಎಂದವನಿಗೆ ಉತ್ತರಿಸುವ ಗೋಜಿಗೆ ಹೋಗದೆ ಫೇಸ್‌ಬುಕ್ಕಿನಲ್ಲಿ ಘಟನೆ ಕುರಿತಾಗಿ ವಿವರವಾಗಿ ಬರೆದು ʻಪೂರ್ವಿಕಾʼಳ ನಕಲಿ ಖಾತೆಯನ್ನು ಟ್ಯಾಗ್‌ ಮಾಡಿ ಫೋನ್‌ ನಂಬರ್‌ ಹಾಕಿ ʻಈ ರೀತಿಯೂ ಮೋಸ ಮಾಡುತ್ತಿದ್ದಾರೆ. ಎಚ್ಚರಿಕೆʼ ಎಂದು ಪೋಸ್ಟ್‌ ಮಾಡಿದೆ. ಒಂದಷ್ಟು ಸ್ನೇಹಿತರು, ವಿದ್ಯಾರ್ಥಿಗಳು ಅವರಿಗೂ ಈ ರೀತಿ ವೀಡಿಯೋ ಕಾಲ್‌ ಮಾಡುವಂತೆ ಮೆಸೇಜುಗಳು ಬಂದಿದ್ದರ ಬಗ್ಗೆ ತಿಳಿಸಿದರು. ಇನ್ನೊಂದಷ್ಟು ಜನರು ತಮ್ಮ ಪರಿಚಯಸ್ಥರು ಈ ರೀತಿಯ ವಂಚನೆಗೆ ಸಿಕ್ಕಿ ಫೇಸ್‌ಬುಕ್ಕನ್ನೇ ತೊರೆದ ಬಗ್ಗೆ ಮೆಸೇಜು ಮಾಡಿ ತಿಳಿಸಿದರು. ಇವ ಬಡಪಟ್ಟಿಗೆ ಸಿಗುವ ಆಳಲ್ಲ ಎಂದರಿವಾಗಿ ಪೂರ್ವಿಕಾಳ ನಕಲಿ ಖಾತೆಯವ ನನ್ನನ್ನು ಫೇಸ್‌ಬುಕ್ಕಿನಲ್ಲಿ, ವಾಟ್ಸಪ್ಪಿನಲ್ಲಿ ಬ್ಲಾಕ್‌ ಮಾಡಿಬಿಟ್ಟ.

ಜೂನ್ 4, 2020

ಬೇಸಿಕಲಿ ವಿ ಆರ್‌ ಬ್ಲಡಿ ಹಿಪೋಕ್ರೈಟ್ಸ್‌…



ಡಾ. ಅಶೋಕ್.‌ ಕೆ. ಆರ್ 
ಇತ್ತೀಚೆಗೆ ಚನ್ನಪಟ್ಟಣದಲ್ಲಿ ಕರಡಿಯೊಂದು ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿತು… ತುಮಕೂರು ಸಮೀಪದ ಊರಿನಲ್ಲಿ ಮೂರು ವರ್ಷದ ಮಗುವನ್ನು ಚಿರತೆ ಹೊತ್ತೊಯ್ದಿತು…. ಕುಣಿಗಲ್‌ ಸುತ್ತಮುತ್ತ ಹಸು, ಸಾಕಿದ ನಾಯಿಯನ್ನೊತ್ತಯ್ಯಲು ಬರುವ ಚಿರತೆಗಳ ಸಂಖೈ ಹೆಚ್ಚುತ್ತಿದೆ…. ಮೊನ್ನೆ ಕೇರಳದಲ್ಲಿ ಆನೆಯೊಂದು ಸತ್ತಿದೆ…. 

ಕೆಂಗೇರಿ ಹತ್ತಿರ ಕೊಮ್ಮಘಟ್ಟ ಅನ್ನೋ ಊರಿದೆ. ಆ ಊರಿಂದ ಹಿಡಿದು ಒಂದ್ಕಡೆ ಮೈಸೂರು ರಸ್ತೆಯವರೆಗೆ ಇನ್ನೊಂದ್ಕಡೆ ತಾವರೆಕೆರೆಯ ಗಡಿಯವರೆಗೆ ಬೃಹತ್ತಾದ (ಏಷಿಯಾಗೆ ದೊಡ್ಡದು ಅಂತಾರೆ, ಸರಿ ತಿಳಿದಿಲ್ಲ) ಕೆಂಪೇಗೌಡ ಲೇಔಟ್‌ ಆಗಿ ಪರಿವರ್ತನೆ ಆಗಿದೆ. ಗೆಳೆಯ ಅಭಿ ಆ ಕಡೆಯಲ್ಲೊಂದಷ್ಟು ದಿನ ತೋಟವೊಂದನ್ನು ಬಾಡಿಗೆ ಹಿಡಿದಿದ್ದ. ತೆಂಗು, ಮಾವು, ಹಲಸು, ಸಪೋಟಾ ಮರಗಳಿದ್ದ ತೋಟಗಳಲ್ಲೀಗ ಜೆಸಿಬಿಗಳದೇ ಕಲರವ. ತೋಟಗಳ ನಡುವೆ ಅಲ್ಲಲ್ಲಿ ಅನೇಕಾನೇಕ ಕುರುಚಲು ಕಾಡುಗಳೂ ಇದ್ದವು. ʻಇಲ್‌ ಸೈಟ್‌ ಮಾಡಿ, ಜನಕ್‌ ಅವಶ್ಯಕತೆ ಇದೆʼ ಅಂತ ಯಾರಾದ್ರೂ ಅರ್ಜಿ ಹಾಕಿದ್ರಾ? ಖಂಡಿತ ಇಲ್ಲ. ಬಿಡಿಎ ಸೈಟ್‌ ಮಾಡ್ತು, ಆ ಸೈಟುಗಳನ್ನ ಜನ ಕೊಂಡ್ಕೊಂಡೂ ಆಗಿದೆ. ಇನ್ನೇನೀಗ ವಿಶಾಲ ವೆಲ್‌ ಪ್ಲ್ಯಾನ್ಡ್‌ ರಸ್ತೆಗಳೂ, ದೊಡ್ಡ ಮನೆಗಳು, ಶಾಪಿಂಗ್‌ ಕಾಂಪ್ಲೆಕ್ಸುಗಳು ಬರೋ ಸಮಯ. ಅಷ್ಟೊಂದ್‌ ಒಳ್ಳೆ ಫಲವತ್ತಾದ ಭೂಮೀನ ಯಾಕ್ರೀ ಹಾಳುಗೆಡವ್ತೀರ ಅಂತ ಯಾರೂ ಮಾತಾಡಲಿಲ್ಲ. ಆ ಹಳ್ಳಿಗಳಲ್ಲಿನ ಜನ ಕೂಡ ಅದಕ್ಕೆ ವಿರೋಧ ವ್ಯಕ್ತಪಡಿಸಲಿಲ್ಲ. ಕಾರಣ ಎಕರೆಗೆ ತೊಂಭತ್ತು ಲಕ್ಷದವರೆಗೂ ಹಣ ನೀಡುತ್ತಿದ್ದರು. ಹೆಚ್ಚು ಎಕರೆ ಇರುವ ವ್ಯಕ್ತಿ ಒಂದಷ್ಟು ಗುಂಟೆ ಭೂಮಿಯನ್ನು ತನ್ನಲ್ಲೇ ಇಟ್ಟುಕೊಳ್ಳಬಹುದಿತ್ತು. ಅರ್ಧ ಮುಕ್ಕಾಲು ಎಕರೆ ಇದ್ದವರೂ ಕೂಡ ಲಕ್ಷಾಧೀಶರಾದರು. ಎಕರೆಗಿಂತ ಹೆಚ್ಚಿದ್ದವರೆಲ್ಲ ಕೋಟ್ಯಾಧೀಶರಾದರು. ಒಳ್ಳೇ ಅಮೌಂಟು ಸಿಗುವಾಗ ಮಾರುವುದು ಬುದ್ಧಿವಂತಿಕೆಯ ಲಕ್ಷಣ ಎನ್ನುವುದೇ ನಮ್ಮ ಆರ್ಥಿಕತೆಯ ಬುನಾದಿಯಲ್ಲವೇ? 

ಕುಣಿಗಲ್‌ ಮಾಗಡಿ ತುಮಕೂರಿನ ಕಡೆಯ ಎಷ್ಟೋ ಬೆಟ್ಟಗುಡ್ಡಗಳಲ್ಲಿ ಜಲ್ಲಿ ಕಲ್ಲು ಕ್ವಾರಿಗಳಿವೆ. ರಸ್ತೆಗಾಗಿ ಬೇಕಾದ ಜಲ್ಲಿ ಉತ್ಪಾದಿಸಲು ಸ್ಥಳೀಯವಾಗಿ ಶುರುವಾದ ಘಟಕಗಳು ರಸ್ತೆ ಮುಗಿದು ಎಷ್ಟೋ ವರ್ಷ ಕಳೆದ ನಂತರವೂ ಪರವಾನಗಿ ಪಡೆದುಕೊಂಡೋ ಲಂಚ ಕೊಟ್ಟುಕೊಂಡೋ ಕಲ್ಲು ಒಡೆಯುತ್ತಿವೆ. ರಾತ್ರೋ ರಾತ್ರಿ ಸಿಡಿವ ಡೈನಮೈಟು ಶಬ್ದಕ್ಕೆ ಎಲ್ಲರೂ ಬೆಚ್ಚಲೇಬೇಕು. ಇವರ್ಯಾಕೆ ಜಲ್ಲಿ ಹೊಡೀತಿದ್ದಾರೆ? ಇಲ್ಲಿ ಕಟ್ಟಿಸೋ ಹೊಸ ಹೊಸ ಸೈಟು ಅಪಾರ್ಟುಮೆಂಟುಗಳಿಗೆ ಜಲ್ಲಿ ಬೇಕೇ ಬೇಕಲ್ಲ. ಇಷ್ಟೊಂದ್ಯಾಕೆ ಅಪಾರ್ಟ್‌ಮೆಂಟು ಸೈಟು? ಒಂದಾದ ಮೇಲೆ ಒಂದನ್ನು ನಾವು ಕೊಂಡುಕೊಳ್ಳುತ್ತಾ ನಾವು ಸ್ಥಿತಿವಂತರಾಗಬೇಕಲ್ಲ? ಆಗಲೇ ತಾನೇ ಸಮಾಜದಲ್ಲಿ ನಮಗೂ ಒಂದು ʻಸ್ಥಾನಮಾನʼ ಅಂತ ಸಿಗೋದು…. 

ಅಕ್ಟೋ 4, 2019

ಗಾಂಧಿ ಜಯಂತಿಯ ದಿನ ಪ್ರಧಾನಿ ಹೇಳಿದ ಸುಳ್ಳು.

ಡಾ. ಅಶೋಕ್. ಕೆ. ಆರ್. 
ಗಾಂಧಿ ಜಯಂತಿಯ ದಿನ ಸಾಬರಮತಿ ಆಶ್ರಮದಲ್ಲಿ ನಡೆದ 'ಸ್ವಚ್ಛ ಭಾರತ ದಿನ’ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಪ್ರಧಾನಿ ನರೇಂದ್ರ ಮೋದಿಯವರು ಭಾರತ ಈಗ ಬಯಲು ಶೌಚ ಮುಕ್ತ ರಾಷ್ಟ್ರವಾಗಿದೆ ಎಂದು ಹೇಳಿದ್ದಾರೆ. ೬೦ ತಿಂಗಳುಗಳಲ್ಲಿ ಹನ್ನೊಂದು ಕೋಟಿ ಶೌಚಾಲಯಗಳು ನಿರ್ಮಾಣವಾಗಿರುವುದನ್ನು ನೆಪವಾಗಿಟ್ಟುಕೊಂಡು ಪ್ರಧಾನಿಯವರು ಬಯಲು ಶೌಚ ಮುಕ್ತ ರಾಷ್ಟ್ರದ ಘೋಷಣೆ ಮಾಡಿದ್ದಾರೆ. ನಿಜಕ್ಕೂ ವಾಸ್ತವದಲ್ಲಿ, ಭಾರತ ಬಯಲು ಶೌಚ ಮುಕ್ತ ರಾಷ್ಟ್ರವಾಗಿದೆಯಾ? 

ನಮ್ಮ ರಾಜಕಾರಣಿಗಳು - ಅದು ಮುಖ್ಯಮಂತ್ರಿಯಾದರೂ ಸರಿ, ಪ್ರಧಾನಮಂತ್ರಿಯಾದರೂ ಸರಿ - ಚುನಾವಣೆಯ ಸಂದರ್ಭದಲ್ಲಿ ಸುಳ್ಳುಗಳನ್ನೇಳುವುದು ಅಥವಾ ಇರುವ ಸತ್ಯವನ್ನೇ ಊಹಿಸಲಾರದಷ್ಟು ದೊಡ್ಡ ಮಟ್ಟದಲ್ಲಿ ವೈಭವೀಕರಿಸಿ ಹೇಳುವುದು ಸಹಜ ಸಂಗತಿಯಂತೇ ಆಗಿ ಹೋಗಿದೆ. My experiments with truth ಅನ್ನೋ ಹೆಸರಿನ ಆತ್ಮಚರಿತ್ರೆ ಬರೆದ, ಸತ್ಯಕ್ಕಾಗಿ ಆಗ್ರಹಿಸುವ ಹೊಸ ಹೊಸ ವಿಧಾನಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸಿದ ಗಾಂಧೀಜಿಯ ಜನ್ಮದಿನವೇ ಅನಾವಶ್ಯಕ ಸುಳ್ಳೇಳುವ ಅನಿವಾರ್ಯತೆಯಾದರೂ ಪ್ರಧಾನಿಗೇನಿತ್ತು? ಅಥವಾ ನಿಜಕ್ಕೂ ಯಾರೋ ಒಬ್ಬ ಅಧಿಕಾರಿಯೋ ಮತ್ತೊಬ್ಬರೋ ವೈಭವೀಕರಿಸಿ ಕೊಟ್ಟ ವರದಿಯನ್ನೇ ನಂಬಿಬಿಡುವಷ್ಟು ನಮ್ಮ ಪ್ರಧಾನಿ ಮುಗ್ದರೇ? 

ಈ ಮುಂಚೆ ಇದ್ದ ನಿರ್ಮಲ ಭಾರತ ಯೋಜನೆಯಡಿ, ತದನಂತರ ಬಂದ ಸ್ವಚ್ಛ ಭಾರತ ಯೋಜನೆಯಡಿ ಬಹಳಷ್ಟು ಗ್ರಾಮಗಳಲ್ಲಿ ಮನೆಗೊಂದು ಶೌಚಾಲಯ ನಿರ್ಮಾಣಗೊಂಡಿರುವುದು ಎದ್ದು ಕಾಣಿಸುತ್ತದೆ (ಕೊನೇ ಪಕ್ಷ ಕರ್ನಾಟಕದ ಹಳ್ಳಿಗಳಲ್ಲಿ), ಅದರಲ್ಲೇನೂ ಅನುಮಾನವಿಲ್ಲ. ಅಷ್ಟಿದ್ದರೂ ಹಳ್ಳಿಯಂಚಿನ ಕೆರೆ ಬದಿಗಳಲ್ಲಿ, ಗದ್ದೆ ಹೊಲದ ಬದುವಿನಲ್ಲಿ, ಕಾಲುವೆಯಂಚಿನಲ್ಲಿ, ಹಳ್ಳಗಳತ್ತಿರ ಬಯಲು ಶೌಚ ಯಥಾಸ್ಥಿತಿಯಲ್ಲೇ ಮುಂದುವರೆದಿರುವುದಂತೂ ಹೌದು. ಶೌಚಾಲಯಗಳ ನಿರ್ಮಾಣ ನಡೆಯುತ್ತಿದ್ದರೂ ಬಯಲು ಶೌಚ ಯಾಕೆ ಮುಂದುವರೆಯುತ್ತಿದೆ?

ಅಕ್ಟೋ 2, 2019

ಬಲಾಡ್ಯ ರಾಜಕೀಯ ಶಕ್ತಿಯಾಗಬೇಕಿರುವ ಕನ್ನಡ ಭಾಷಿಕ ಸಮುದಾಯ

ಕು.ಸ.ಮಧುಸೂದನ ರಂಗೇನಹಳ್ಳಿ 
ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಮೇಯರ್ ಸ್ಥಾನ ಕನ್ನಡೇತರರ ಪಾಲಾಗಿರುವ ಹಿನ್ನೆಲೆಯಲ್ಲಿ ‘ಕನ್ನಡಿಗ’ರೆಂದರೆ ಯಾರು? ಕನ್ನಡಿಗ ಎಂದು ಹೇಳಲು ಇರುವ ಮಾನದಂಡವೇನು ಎಂಬುದರ ಬಗ್ಗೆ ಬಿಸಿಬಿಸಿ ಚರ್ಚೆಗಳು ನಡೆಯುತ್ತಿರುವ ಈ ಸನ್ನಿವೇಶದಲ್ಲಿಯೇ ಕನ್ನಡ ಭಾಷಿಕ ಜನಾಂಗ ತನ್ನನ್ನು ತಾನು ಆಳಿಕೊಳ್ಳಲು ಸಶಕ್ತವಾಗಿದೆಯೇ ಮತ್ತು ಅದಕ್ಕೆ ಬೇಕಾಗಿರುವುದು ಏನು ಎಂಬುದರ ಬಗ್ಗೆ ಒಂದಿಷ್ಟು ಚಿಂತನೆ ಮಾಡಬೇಕಾದ ಅನಿವಾರ್ಯತೆ ಬಂದೊದಗಿದೆ 

ನಿಜವಾದ ಅರ್ಥದಲ್ಲಿ ಇವತ್ತು ಕನ್ನಡ ಚಳುವಳಿಗಳು ಸಂಪೂರ್ಣವಾಗಿ ಸ್ಥಗಿತಗೊಂಡಂತೆ ಕಾಣುತ್ತಿವೆ. ಇಂತಹ ಚಳುವಳಿಗಳ ಆತ್ಮವಾಗಿರಬೇಕಾಗಿದ್ದ ಅಕ್ಷರಸ್ಥ ಮದ್ಯಮವರ್ಗ ಸ್ವತ: ಜಡಗೊಂಡಿರುವ ಈ ಸನ್ನಿವೇಶದಲ್ಲಿ ನಮ್ಮ ಕನ್ನಡ ಚಳುವಳಿ ಸಹ ನಿಸ್ತೇಜಗೊಂಡಂತೆ ನಮಗೆ ಭಾಸವಾಗುತ್ತಿದ್ದರೆ ಅಚ್ಚರಿಯೇನಲ್ಲ. ಇಂತಹ ನಿರಾಶಾದಾಯಕ ಸನ್ನಿವೇಶದಲ್ಲಿಯೂ ಕನ್ನಡ ಚಳುವಳಿಯ ಕುರಿತು ಒಂದಿಷ್ಟು ಆಶಾಬಾವನೆ ಒಡಮೂಡಿದ್ದು ಕೆಲವರ್ಷಗಳ ಹಿಂದೆ ನಡೆದ ಕಳಸಾ ಬಂಡೂರಿ ಮತ್ತು ಕಾವೇರಿ ನದಿ ನೀರಿನ ಹಂಚಿಕೆಯ ವಿವಾದಗಳ ಬಗ್ಗೆ ನಡೆದ ಹೋರಾಟದ ಕ್ಷಣದಲ್ಲಿ ಮಾತ್ರ. 

ಹಾಗೆ ನೋಡಿದರೆ ನಾವು ಕನ್ನಡ ಚಳುವಳಿಯ ಒಟ್ಟು ಅರ್ಥವನ್ನೇ ಸಂಕುಚಿತಗೊಳಿಸಿ ನೋಡುವ ವಿಷಯದಲ್ಲಿಯೇ ಎಡವಿದ್ದೇವೆ. ಯಾಕೆಂದರೆ ಕನ್ನಡ ಚಳುವಳಿ ಎಂದರೆ ಅದು ಕೇವಲ ಕನ್ನಡ ಬಾಷೆಗೆ ಸೀಮಿತವಲ್ಲ. ಬದಲಿಗೆ ಕರ್ನಾಟಕದ ನೆಲ, ಜಲ, ಬಾಷೆ, ನೈಸರ್ಗಿಕ ಸಂಪನ್ಮೂಲಗಳೂ ಸೇರಿದಂತೆ ಒಟ್ಟು ಕನ್ನಡ ನಾಡಿನ ಚಳುವಳಿಯೇ ನಿಜವಾದ ಕನ್ನಡ ಚಳುವಳಿ! ಆದರೆ ಇದುವರೆಗು ನಡೆದ ಕನ್ನಡ ಚಳುವಳಿಗಳು ಕೇವಲ ಬಾಷಿಕ ಚಳುವಳಿಗಳಾಗಿ: ಆಡಳಿತ ಬಾಷೆ ಕನ್ನಡವಾಗಬೇಕು, ಕನ್ನಡ ಮಾದ್ಯಮದಲ್ಲಿ ಶಿಕ್ಷಣ ನೀಡಬೇಕು, ನಾಮಫಲಕಗಳು ಕನ್ನಡದಲ್ಲಿ ಇರಬೇಕೆಂಬ ಬೇಡಿಕೆಗಳಿಗೆ ಮಾತ್ರ ಸೀಮಿತವಾಗಿ ನಡೆಯುತ್ತ ಬಂದಿವೆ. ಇಂತಹ ಏಕಮುಖ ಚಳುವಳಿಯ ಅಪಾಯವೆಂದರೆ ಕನ್ನಡ ಚಳುವಳಿ ಏಕಾಕಿಯಾಗಿ ಉಳಿದುಬಿಡುವುದು ಮತ್ತು ಕನ್ನಡದ ನೆಲ, ಜಲ, ಸಂಪನ್ಮೂಲಗಳ ವಿಷಯ ತನಗೆ ಸಂಬಂದಿಸಿದ್ದಲ್ಲವೆಂಬ ಅಭಿಪ್ರಾಯ ಬೆಳೆಸಿಕೊಂಡು ಬಿಡುವುದಾಗಿದೆ. ಹೀಗಾದಾಗ ಇಡಿ ಕನ್ನಡ ಚಳುವಳಿ ಕೇವಲ ಭಾಷಾ ದುರಭಿಮಾನದ ಸಂಕೇತವಾಗಿ ಮಾತ್ರ ಉಳಿದು ಬಿಡುವ ಅಪಾಯವಿದೆ. 

ಸೆಪ್ಟೆಂ 24, 2019

ಬಂಡವಾಳ ಹೂಡಿಕೆದಾರರ ಸಮಾವೇಶ ಎಂಬ ಬೃಹತ್ ಪ್ರಹಸನ!

ಕು.ಸ.ಮಧುಸೂದನ ರಂಗೇನಹಳ್ಳಿ
ದೇಶ ಮತ್ತು ರಾಜ್ಯವನ್ನು ತೀವ್ರವಾಗಿ ಕಾಡುತ್ತಿರುವ ತೀವ್ರ ಆರ್ಥಿಕ ಹಿಂಜರಿಕೆ ಮತ್ತು ನಿರುದ್ಯೋಗ ಸಮಸ್ಯೆಗಳ ನಡುವೆಯೇ ರಾಜ್ಯದ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್ ಅವರು ಮತ್ತೊಂದು ಸುತ್ತಿನ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸುವುದಾಗಿ ಘೋಷಿಸಿದ್ದಾರೆ. 

2013ರಿಂದ 2018ರವರೆಗು ಅಂದಿನ ಕಾಂಗ್ರೆಸ್ ಸರಕಾರ ನಡೆಸಿದ್ದ ಬಂಡವಾಳ ಹೂಡಿಕೆಯ ಸಮಾವೇಶಗಳು ಪಡದುಕೊಂಡಿದ್ದ ಪ್ರಚಾರವನ್ನು, ತಂದುಕೊಟ್ಟ ಪಲಿತಾಂಶವನ್ನು ವಿಶ್ಲೇಷಿಸಿದರೆ ಈ ಸಮಾವೇಶಗಳ ನಿಜಬಣ್ಣ ಬಯಲಾಗುತ್ತ ಹೋಗುತ್ತದೆ. ಈ ಹಿಂದಿನ ಕೈಗಾರಿಕಾ ಮಂತ್ರಿಗಳು ರಾಜ್ಯದಲ್ಲಿ ಸಮಾವೇಶಗಳನ್ನು ನಡೆಸುವುದರ ಜೊತೆಜೊತೆಗೆ ವಿದೇಶಗಳಲ್ಲಿಯೂ ರೋಡ್ ಶೋಗಳನ್ನು ನಡೆಸಿ ತಮ್ಮ ಪ್ರಯತ್ನ ಶೇಕಡಾ ನೂರರಷ್ಟು ಫಲಪ್ರದವಾಗಿದೆಯೆಂದು ಬಡಾಯಿ ಕೊಚ್ಚಿಕೊಂಡಿದ್ದರು. ಆದರೆ ವಸ್ತು ಸ್ಥಿತಿ ಬೇರೆಯದೆ ಇದೆ! 

ಕಳೆದ ಐದು ವರ್ಷಗಳಲ್ಲಿ ಸರಿ ಸುಮಾರು ಎಪ್ಪತ್ತು ಸಾವಿರ ಕೋಟಿ ಮೊತ್ತದ ಒಂದು ಸಾವಿರದ ನೂರೈವತ್ತು ಯೋಜನೆಗಳಿಗೆ ಸರಕಾರದ ಉನ್ನತಾಧಿಕಾರದ ಸಮಿತಿ ಮಂಜೂರಾತಿ ನೀಡಿತ್ತು. ಆದರೆ ಈವರೆಗು ಕೇವಲ ನೂರಾ ನಲವತ್ತೆರಡು ಯೋಜನೆಗಳು ಮಾತ್ರ ಅನುಷ್ಠಾನಗೊಂಡಿದ್ದು, ಹೂಡಿಕೆಯಾದ ಬಂಡವಾಳ ಕೇವಲ ಒಂಭತ್ತು ಸಾವಿರ ಕೋಟಿಯಷ್ಟು ಮಾತ್ರ..ಇನ್ನುಳಿದ ಹಣ ಹೂಡಿಕೆಯಾಗುವ ಭರವಸೆಯಂತು ಸದ್ಯಕ್ಕೆ ಯಾರಿಗೂ ಇಲ್ಲ. ಯಾಕೆಂದರೆ ಕುಸಿಯುತ್ತಿರುವ ಆರ್ಥಿಕ ವ್ಯವಸ್ಥೆಯಲ್ಲಿ ನಿರಾಶಾದಾಯಕ ಮಾರುಕಟ್ಟೆಯ ವ್ಯವಸ್ಥೆಯಲ್ಲಿ ಬಂಡವಾಳ ಹೂಡಲು ಯಾರೂ ಮುಂದೆಬರುವುದಿಲ್ಲವೆಂಬುದು ಸತ್ಯ. 

ಆಗ 28, 2019

ಸಮ್ಮಿಶ್ರ ಸರಕಾರದ ಪತನ: ನಾಯಕರುಗಳ ಆರೋಪ-ಪ್ರತ್ಯಾರೋಪ!

ಕು.ಸ.ಮಧುಸೂದನ 
ಮಾಜಿ ಪ್ರದಾನಿ ಶ್ರೀದೇವೇಗೌಡರ ಮತ್ತು ಮಾಜಿಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ನಡುವಿನ ಆರೋಪ ಪ್ರತ್ಯಾರೋಪಗಳು,ರಾಜ್ಯ ರಾಜಕಾರಣವನ್ನು ಹತ್ತಿರದಿಂದ ಅವಲೋಕಿಸುತ್ತಿರುವವರಿಗೆ ಅಚ್ಚರಿಯನ್ನೇನು ಉಂಟು ಮಾಡಿಲ್ಲ. ಬದಲಿಗೆ ಕಳೆದ ಹದಿನಾರು ತಿಂಗಳ ಹಿಂದೆ ರಚನೆಯಾದ ಸಂಮಿಶ್ರ ಸರಕಾರದ ರಚನೆಯ ವಿಷಯಕ್ಕಾಗಿ ಮುನಿಸು ಮರೆತು ಒಂದಾಗಿದ್ದು ಬಾಜಪವನ್ನು ಸೋಲಿಸಲು ಜಾತ್ಯಾತೀತ ಪಕ್ಷಗಳು ಒಂದಾಗಬೇಕೆಂದು ಬಯಸಿದ್ದವರಿಗೆ ಸಂತೋಷವನ್ನುಂಟು ಮಾಡಿತ್ತು. ಆದರೆ ಶ್ರೀ ಕುಮಾರಸ್ವಾಮಿಯವರ ನೇತೃತ್ವದ ಸಮ್ಮಿಶ್ರ ಸರಕಾರ ಪತನವಾಗುವುದರೊಂದಿಗೆ ಜಾತ್ಯಾತೀತ ಮತದಾರರಿಗೆ ಭ್ರಮನಿರಸನವಾಗಿದೆ. ಮತ್ತು ಸ್ವಪ್ರತಿಷ್ಠೆಯೇ ಮುಖ್ಯವೆಂದುಕೊಂಡಿರುವ ನಾಯಕರುಗಳ ನಡೆಯ ಬಗ್ಗೆ ಜನ ಬೇಸರಗೊಂಡಿದ್ದಾರೆ. 

ಒಂದು ಕಡೆ ಜಾತ್ಯಾತೀತ ಜನತಾದಳದ ರಾಷ್ಟ್ರಾದ್ಯಕ್ಷರಾದ ದೇವೇಗೌಡರು ಕಾಂಗ್ರೆಸ್ಸಿನ ಕಿರುಕುಳಕ್ಕೆ ಕುಮಾರಸ್ವಾಮಿ ರೋಸಿಹೋಗಿದ್ದರು ಎಂದು ಹೇಳುತ್ತಲೇ ಸಮ್ಮಿಶ್ರ ಸರಕಾರ ಪತನವಾಗಲು ಸಿದ್ದರಾಮಯ್ಯನವರೇ ಕಾರಣ ಎಂಬ ಮಾತನ್ನೂ ಬಹಿರಂಗವಾಗಿ ಹೇಳುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಮಾತನಾಡಿದ ಸಿದರಾಮಯ್ಯನವರು ಸಮ್ಮಿಶ್ರ ಸರಕಾರ ಬೀಳಲು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ನಿರ್ದಾರಗಳನ್ನು ತೆಗೆದುಕೊಳ್ಳುತ್ತಿದ್ದುದು, ದೇವೇಗೌಡರ ಕುಟುಂಬ ಅದರಲ್ಲೂ ರೇವಣ್ಣನವರು ಸರಕಾರದ ಆಡಳಿತದಲ್ಲಿ ಮೂಗುತೂರಿಸಿದ್ದೇ ಕಾರಣವೆಂದು ಹೇಳಿದ್ದಾರೆ. ಸಮ್ಮಿಶ್ರ ಸರಕಾರದ ಹದಿನಾಲ್ಕು ತಿಂಗಳ ಆಡಳಿತವನ್ನು, ಅದರ ಆಂತರಿಕ ಕಿತ್ತಾಟಗಳನ್ನು ಸೂಕ್ಷ್ಮವಾಗಿ ನೋಡಿದವರಿಗೆ ಇಬ್ಬರೂ ನಾಯಕರುಗಳ ಮಾತುಗಳೂ ಅರ್ದಸತ್ಯವೆಂಬುದು ಗೊತ್ತಾಗುತ್ತದೆ. 

ಆಗ 24, 2019

ನೈತಿಕತೆಯ ಬಗೆಗೆ ಕೆಲವು ಮೂರ್ಖ ಪ್ರಶ್ನೆಗಳು!

ಕು.ಸ.ಮಧುಸೂದನ ರಂಗೇನಹಳ್ಳಿ 

ಅಂತೂ 'ಆಪರೇಷನ್ ಕಮಲ' ಅನ್ನುವ ರಾಕ್ಷಸೀಆಯುಧವನ್ನು ಬಳಸಿ,ಮೈತ್ರಿ ಸರಕಾರವನ್ನು ಉರುಳಿಸಿ ತನ್ನದೇ ಸರಕಾರ ರಚಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಸರಕಾರ ನಡೆಸುತ್ತಿದ್ದ ಕಾಂಗ್ರೆಸ್ ಮತ್ತು ಜಾತ್ಯಾತೀತ ಜನತಾದಳ ಪಕ್ಷಗಳ ಆಂತರಿಕ ಭಿನ್ನಮತೀಯ ಚಟುವಟಿಕೆಗಳಲ್ಲಿ ತನ್ನ ಪಾತ್ರವಿಲ್ಲವೆನ್ನುತ್ತಲೇ ನಾಟಕವಾಡುತ್ತ ಬಂದ ಬಿಜೆಪಿಯ ನಾಯಕರುಗಳ ಮಾತುಗಳನ್ನು ಜನ ನಂಬದೇ ಹೋದರೂ, ಈ ಕ್ಷಣಕ್ಕೂ ಬಿಜೆಪಿ ತಾನು ಪರಮಪವಿತ್ರವೆಂಬ ಮುಖವಾಡದಲ್ಲಿ ಸರಕಾರ ರಚಿಸಿ. ಗೆಲುವಿನ ವಿಕೃತ ನಗು ಬೀರುತ್ತಿದೆ 

ಆದರೆ ಪ್ರಜಾಸತ್ತೆಯಲ್ಲಿನ ಈ ಕಪಟನಾಟಕ ಇಲ್ಲಿಗೇ ಮುಗಿಯುವುದಿಲ್ಲ. ಅಕಸ್ಮಾತ್ ಅತೃಪ್ತ ಶಾಸಕರುಗಳ(ಆತ್ಮಗಳ) ಅನರ್ಹತೆ ಬಗ್ಗೆ ನ್ಯಾಯಾಲಯದ ತೀರ್ಪೇನೆ ಬರಲಿ, ಇನ್ನು ಆರುತಿಂಗಳಲ್ಲಿ ನಡೆಯಲಿರುವ ಉಪಚುನಾವಣೆಗಳಲ್ಲಿ ಬಿಜೆಪಿ ಅವರುಗಳಿಗೆ ತನ್ನ 'ಬಿ'ಫಾರಂ ಕೊಟ್ಟು ಮತಬಿಕ್ಷೆಗೆ ಜನರ ಮುಂದೆ ಬರಲೇಬೇಕಾಗುತ್ತದೆ. ಆಗ ಜನ ಕೆಳಗಿನ ಪ್ರಶ್ನೆಗಳನ್ನು ಅವರಿಗೆ ಕೇಳಬೇಕಾಗುತ್ತದೆ: 

ಮೊದಲಿಗೆ, ಆಡಳಿತ ಪಕ್ಷಗಳ ಶಾಸಕರುಗಳ ರಾಜಿನಾಮೆಯಲ್ಲಿ ನನ್ನ ಪಾತ್ರವಿಲ್ಲ ಎನ್ನುವ ನಿಮ್ಮ ಮಾತನ್ನು ನಂಬುವ ಸ್ಥಿತಿಯಲ್ಲಿ ಯಾರೂಇಲ್ಲ. ಯಾಕೆಂದರೆ ಕಳೆದ ವರ್ಷ ವಿದಾನಸಭೆಯ ಚುನಾವಣಾ ಪಲಿತಾಂಶಗಳು ಬಂದಾಗ ತನಗೆ ಬಹುಮತವಿಲ್ಲವೆಂಬ ಸಂಗತಿ ಗೊತ್ತಿದ್ದರೂ ಶ್ರೀ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ್ದರ ಹಿನ್ನೆಲೆಯಲ್ಲಿ ಇದ್ದುದು, ಅನ್ಯಪಕ್ಷಗಳಿಂದ ಹಲವು ಶಾಸಕರುಗಳ ರಾಜಿನಾಮೆ ಕೊಡಿಸಿ, ಉಪಚುನಾವಣೆಗಳಲ್ಲಿ ಅವರನ್ನು ಗೆಲ್ಲಿಸಿಕೊಂಡು ತಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವ ಗುಪ್ತ ಕಾರ್ಯತಂತ್ರವೇ ಅಲ್ಲವೇ? ಅದೊಂದನ್ನು ಹೊರತು ಪಡಿಸಿದಂತೆ ವಿಶ್ವಾಸ ಮತ ಸಾಬೀತು ಪಡಿಸಲು ನಿಮಗೆ ಅನ್ಯ ಮಾರ್ಗವೇನಾದರು ಇತ್ತೆ? ಕುಮಾರಸ್ವಾಮಿಯವರು ಬಿಡುಗಡೆ ಮಾಡಿದ ಒಂದು ಆಡಿಯೊ ಕ್ಲಿಪಿಂಗಿನಲ್ಲಿ ತಾವು ಈ ವ್ಯವಹಾರದ ಬಗ್ಗೆ ಮಾತಾಡಿದ್ದೂ ಇದೆ. 

ಜೂನ್ 28, 2019

'ಏಕಕಾಲಕ್ಕೆ ಚುನಾವಣೆ' ಬಾಜಪದ ಹಳೆಯಜೆಂಡಾ

ಕು.ಸ.ಮಧುಸೂದನ ರಂಗೇನಹಳ್ಳಿ 
ಪ್ರದಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಎರಡನೇ ಬಾರಿಗೆ ದೆಹಲಿಯ ಗದ್ದುಗೆ ಹಿಡಿದಾಕ್ಷಣ ಲೋಕಸಭೆ ಮತ್ತು ವಿದಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆಗಳನ್ನು ನಡೆಸುವ ಬಗ್ಗೆ ಸರ್ವಪಕ್ಷಗಳ ಸಭೆ ಕರೆಯುವುದಾಗಿ ಹೇಳುವುದರೊಂದಿಗೆ ಬಾಜಪದ ಹಳೆಯ ಗುಪ್ತ ಕಾರ್ಯಸೂಚಿಗೆ ಮತ್ತೆ ಜೀವ ತುಂಬಿದ್ದಾರೆ. 

ಬಾಜಪದ ಈ ಕಾರ್ಯತಂತ್ರ ಹೊಸತೇನಲ್ಲ. 2014ರಲ್ಲಿ ನರೇಂದ್ರ ಮೋದಿಯವರು ಪ್ರದಾನಮಂತ್ರಿಗಳಾದ ಕೆಲವೆ ತಿಂಗಳಲ್ಲಿ ಕೇಂದ್ರ ಕಾನೂನು ಸಚಿವಾಲಯ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿದಾನಸಭೆಗಳಿಗೂ ಏಕಕಾಲಕ್ಕೆ ಚುನಾವಣೆ ನಡೆಸುವುದು ಸೂಕ್ತವೆಂಬ ಸಲಹೆನೀಡಿತ್ತು. ನಂತರದ ಕೆಲವೆ ದಿನಗಳಲ್ಲಿ ಕೇಂದ್ರ ಚುನಾವಣಾ ಆಯೋಗವು ಸಹ ಕಾನೂನು ಇಲಾಖೆಯ ಈ ಸೂಚನೆಗೆ ಸಹಮತ ಸೂಚಿಸುತ್ತ, ಸರಕಾರ ಕಾನೂನು ತಿದ್ದುಪಡಿ ಮಾಡಿ ಹಸಿರು ನಿಶಾನೆ ತೋರಿಸಿದಲ್ಲಿ ತನಗೇನು ಅಭ್ಯಂತರವಿಲ್ಲವೆಂದು ಹೇಳಿತ್ತು. ನಂತರದಲ್ಲಿ ಪ್ರದಾನಿಯವರು ಸಹ ಏಕಕಾಲಕ್ಕೆ ಚುನಾವಣೆ ನಡೆಸಲು ತಾವು ಇಚ್ಚಿಸುವುದಾಗಿ ಸಾರ್ವಜನಿಕವಾಗಿ ಹೇಳುವುದರೊಂದಿಗೆ ಒಂದಷ್ಟು ಚರ್ಚೆಗೆ ನಾಂದಿ ಹಾಡಿದ್ದರು. 

ಮೇ 30, 2019

ದಕ್ಷಿಣವನ್ನು ಬಾಜಪ ಯಾಕೆ ಗೆಲ್ಲಲಾಗಲಿಲ್ಲ?

ಕು.ಸ.ಮಧುಸೂದನ
ದೇಶದ ಉದ್ದಗಲಕ್ಕೂ ತನ್ನ ಪ್ರಭಾವಳಿಯನ್ನು ವಿಸ್ತರಿಸಿ ಮುನ್ನೂರಕ್ಕೂ ಅಧಿಕಸ್ಥಾನಗಳನ್ನು ಗೆದ್ದ ಬಾಜಪ ದಕ್ಷಿಣ ಭಾರತದಲ್ಲಿ ಮಾತ್ರ ಬಹುತೇಕ ವಿಫಲವಾಗಿದೆ. ಕರ್ನಾಟಕ ಒಂದನ್ನು ಹೊರತು ಪಡಿಸಿದರೆ ಮಿಕ್ಕಂತೆ ಆಂದ್ರಪ್ರದೇಶ, ತಮಿಳುನಾಡು, ಪುದುಚೇರಿ, ಕೇರಳಗಳಲ್ಲಿ ಕನಿಷ್ಠ ಖಾತೆ ತೆರೆಯಲೂ ಅದು ವಿಫಲವಾಗಿದ್ದು ತೆಲಂಗಾಣದಲ್ಲಿ ಮಾತ್ರ ಕಷ್ಟ ಪಟ್ಟು ನಾಲ್ಕು ಸ್ಥಾನಗಳನ್ನು ಗೆದ್ದಿದೆ.

ಯಾವತ್ತಿಗೂ ಬಾಜಪ ಖಾತೆ ತೆರೆಯಲೇ ಅಸಾದ್ಯವೆಂಬ ಬಲವಾದ ಅನಿಸಿಕೆಯಿದ್ದ ಈಶಾನ್ಯಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾದ ಅದು ದಕ್ಷಿಣದಲ್ಲಿ ನೆಲೆ ಕಂಡುಕೊಳ್ಳಲು ಏದುಸಿರು ಬಿಡುತ್ತಿರುವುದಾದರೂ ಯಾಕೆಂದು ವಿಶ್ಲೇಷಿಸುತ್ತ ಹೋದರೆ ಹಲವು ಐತಿಹಾಸಿಕ ಕಾರಣಗಳು ಕಂಡುಬರುತ್ತವೆ.

ಮೇ 1, 2019

ಇಂಡಿಯಾದ ಚುನಾವಣೆಗಳು: ಡಿಸ್ಕೌಂಟ್ ಸೇಲಿನ ಬಿಗ್ ಬಜಾರುಗಳು

ಕು.ಸ.ಮಧುಸೂದನ ರಂಗೇನಹಳ್ಳಿ
ಇವತ್ತು ಇಂಡಿಯಾದಲ್ಲಿನ ಸಾರ್ವತ್ರಿಕ ಚುನಾವಣೆಗಳು ತಮ್ಮ ಸಾಂಪ್ರದಾಯಿಕ ಮೌಲ್ಯ ಮತ್ತು ಮಹತ್ವವನ್ನು ಕಳೆದು ಕೊಳ್ಳುತ್ತಿವೆಯೆಂದರೆ ತಪ್ಪಾಗಲಾರದು. ಹಾಗೆಂದು ಕಳೆದ ಏಳು ದಶಕಗಳಲ್ಲಿ ನಡೆದ ಎಲ್ಲ ಚುನಾವಣೆಗಳ ಬಗ್ಗೆಯೂ ಈ ಮಾತು ಹೇಳಲಾಗದು. 

ಆದರೆ ತೊಂಭತ್ತರ ದಶಕದ ನಂತರದಲ್ಲಿ ನಡೆದ ಬಹುತೇಕ ಚುನಾವಣೆಗಳು ತಮ್ಮ ಮೂಲ ಸ್ವರೂಪವನ್ನು ಕಳೆದುಕೊಂಡು ಒಂದು ಬೃಹತ್ ಸಂತೆಯ ಸ್ವರೂಪ ಪಡೆದುಕೊಂಡಿವೆ. ಬದಲಾದ ಆರ್ಥಿಕ ನೀತಿಯ ಫಲವಾಗಿ ಪ್ರವರ್ದಮಾನಕ್ಕೆ ಬಂದ ಎಲೆಕ್ಟ್ರಾನಿಕ್ ಮಾಧ್ಯಮಗಳು ಒಂದು ದೊಡ್ಡ ಉದ್ದಿಮೆಯಾಗಿ ಬೆಳೆದು ನಿಂತಿತು. ಆಗ ನಾಯಿಕೊಡೆಗಳಂತೆ ಹುಟ್ಟಿಕೊಂಡ ಇಂಗ್ಲೀಷ್ ಮತ್ತು ಪ್ರಾದೇಶಿಕ ಭಾಷೆಗಳ ದೃಶ್ಯ ಮಾಧ್ಯಮಗಳು ನಮ್ಮ ಇಡೀ ಚುನಾವಣೆಯ ಪ್ರಕ್ರಿಯೆಯನ್ನು ಹೈಜಾಕ್ ಮಾಡಿಬಿಟ್ಟಿವೆ.

ಇನ್ನೂ ಸ್ಪಷ್ಟವಾಗಿ ಹೇಳುವುದಾದಲ್ಲಿ, ನಮ್ಮ ಸಮೂಹ ಮಾದ್ಯಮಗಳು (ಮುಖ್ಯವಾಗಿ ಎಲೆಕ್ಟ್ರಾನಿಕ್ ಮಾದ್ಯಮಗಳು) ಇಡೀ ದೇಶವನ್ನು ಒಂದು ಮಾರುಕಟ್ಟೆಯನ್ನಾಗಿಸಿ (ನಗರದ ಬಾಷೆಯಲ್ಲಿ ಹೇಳುವುದಾದರೆ ಮಾಲ್ ಅನ್ನಾಗಿಸಿ) ಮತದಾರರನ್ನು ಗ್ರಾಹಕರನ್ನಾಗಿಸಿ, ರಾಜಕೀಯ ಪಕ್ಷಗಳು, ಮತ್ತವುಗಳ ನಾಯಕರುಗಳನ್ನು ಮಾರಾಟದ ಸರಕುಗಳನ್ನಾಗಿಸಿ ಬಿಟ್ಟಿವೆ. ಇದಕ್ಕೆ ಕಾರಣವೂ ಸ್ಪಷ್ಟ: ಮುಕ್ತ ಆರ್ಥಿಕ ನೀತಿಯ ನಂತರ ಪ್ರಾರಂಭವಾದ ಬಹುತೇಕ ಸುದ್ದಿವಾಹಿನಿಗಳು ಒಂದಲ್ಲಾ ಒಂದು ಕಾರ್ಪೋರೇಟ್-ಬಂಡವಾಳಶಾಹಿಗಳ ಒಡೆತನದಲ್ಲಿವೆ. ಅಂತಹ ಬಲಾಢ್ಯ ಶಕ್ತಿಗಳು ತಮ್ಮ ಹಿತಾಸಕ್ತಿಯನ್ನು ಕಾಪಾಡುವ ರಾಜಕೀಯ ಪಕ್ಷಗಳ ಮತ್ತು ಅವುಗಳ ನಾಯಕರುಗಳನ್ನು ತಮ್ಮ ಮಾಧ್ಯಮಗಳ ಮೂಲಕ ಪ್ರಮೋಟ್ ಮಾಡುತ್ತ, ಚುನಾವಣೆಗಳನ್ನು, ಮತ್ತದರ ಪಲಿತಾಂಶಗಳನ್ನು ತಮಗೆ ಬೇಕಾದ ರೀತಿಯಲ್ಲಿ ಬರುವಂತೆ ನೋಡಿಕೊಳ್ಳುವ ಪ್ರಯತ್ನದಲ್ಲಿವೆ. ತಮಗೆ ಬೇಕಾದ ಪಕ್ಷಗಳು,ನಾಯಕರುಗಳನ್ನು ಬಣ್ಣಬಣ್ಣದ ಜಾಹಿರಾತುಗಳ ಮೂಲಕ ಪರಿಣಾಮಕಾರಿಯಾಗಿ ಬಿಂಬಿಸುತ್ತ ಮತದಾರರಿಗೆ ಮಾರುತ್ತಿದ್ದಾರೆ. ಇದರ ಕಾರ್ಯವೈಖರಿ ಹೀಗಿದೆ:

ಏಪ್ರಿ 28, 2019

ಚುನಾವಣಾ ನೀತಿಸಂಹಿತೆ ಎಂಬ ಪ್ರಹಸನ

ಕು.ಸ.ಮಧುಸೂದನರಂಗೇನಹಳ್ಳಿ
ನಮ್ಮದು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ.

ಇಲ್ಲಿನ ಮತದಾರರ ಸಂಖ್ಯೆ ತೊಂಭತ್ತು ಕೋಟಿ.ಇಪ್ಪತ್ತು ಲಕ್ಷ ಮತಯಂತ್ರಗಳು. ಒಂದೂಕಾಲು ಕೋಟಿಗೂ ಅಧಿಕ ಮತಗಟ್ಟೆಯನ್ನು ನಿರ್ವಹಿಸುವ ಸಿಬ್ಬಂದಿಗಳು, ಎರಡೂವರೆ ಕೋಟಿಗೂ ಅಧಿಕ ಭದ್ರತಾ ಸಿಬ್ಬಂದಿ. ಅಧಿಕೃತವಾಗಿ ಇಷ್ಟಲ್ಲದೆ ಚುನಾವಣೆಗಳಿಗೆ ಪರೋಕ್ಷವಾಗಿ ನೆರವಾಗುವ ಮೂರು ಕೋಟಿ ಇತರೇ ನೌಕರರು. ಇಷ್ಟು ದೊಡ್ಡ ಮಟ್ಟದ ಚುನಾವಣಾ ವ್ಯವಸ್ಥೆ ಹೊಂದಿರುವ ನಮ್ಮ ದೇಶದಲ್ಲಿ ಇದುವರೆಗು ಬಹುತೇಕ ಚುನಾವಣೆಗಳು ಶಾಂತಿಯುತವಾಗಿ (ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲವು ಚುನಾವಣೆಗಳನ್ನು ಹೊರತು ಪಡಿಸಿದರೆ) ನಡೆದಿದ್ದು ತಮ್ಮ ವಿಸ್ವಾಸಾರ್ಹತೆಯನ್ನು ಉಳಿಸಿಕೊಂಡು ಬರುತ್ತಿವೆ.

ಅದರೆ ಈ ಬಾರಿ ನಡೆದ ಇದುವರೆಗಿನ ಮೂರು ಹಂತದ ಚುನಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಚುನಾವಣಾ ನೀತಿ ಸಂಹಿತೆ ಎನ್ನುವುದು ಹಾಸ್ಯಾಸ್ಪದ ವಿಷಯವಾಗಿ ಬಿಟ್ಟಿದೆ. ತಾನೆ ವಿಧಿಸಿದ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಲ್ಲಿ ಚುನಾವಣಾ ಆಯೋಗ ವಿಫಲವಾಗುತ್ತಿಯೆಂಬ ಅನುಮಾನ ತಲೆದೋರುತ್ತಿದೆ. ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಬಹುದಾದಂತ ದತ್ತ ಅಧಿಕಾರವನ್ನು ಹೊಂದಿರುವ ಆಯೋಗ ಯಾಕೊ ಈ ಅಧಿಕಾರವನ್ನು ಉಪಯೋಗಿಸಿಕೊಳ್ಳುವಲ್ಲಿ ಆಸಕ್ತಿಯನ್ನೇನು ತೋರುತ್ತಿಲ್ಲ. ಚುನಾವಣಾ ಆಯೋಗದ ಈ ಕ್ರಿಯಾಹೀನತೆಯನ್ನು ಕಂಡ ಸುಪ್ರೀಂ ಕೋರ್ಟ ಮದ್ಯಪ್ರವೇಶಿಸಿ ನೀತಿಸಂಹಿತೆ ಉಲ್ಲಂಘಿಸಿದವರ ವಿರುದ್ದಕ್ರಮ ತೆಗೆದುಕೊಳ್ಳಲು ಆಯೋಗಕ್ಕೆ ಸೂಚನೆ ನೀಡಬೇಕಾಗಿ ಬಂದಿತು.

ಮಾರ್ಚ್ 5, 2019

ಸುಮಲತಾ ಅಂಬರೀಷ್ ಗೊಂದು ಪತ್ರ.

ಪ್ರೀತಿಯ ಸುಮಲತಾ ಅಂಬರೀಷ್ ರವರಿಗೆ,

ದಶಕಗಳ ಕಾಲದಿಂದ ಜೊತೆಗಿದ್ೲದ ಸಂಗಾತಿಯನ್ನು ಇತ್ತೀಚೆಗಷ್ಟೇ ಕಳೆದುಕೊಂಡಿರುವವರಿಗೆ ಹೇಗಿದ್ದೀರಿ ಅಂತೆಲ್ಲ ಕೇಳಿ ಮುಜುಗರಕ್ಕೊಳಪಡಿಸಬಾರದೆಂಬ ಅರಿವಿದೆ. ಅಂಬರೀಷ್ ಎಂಬ ಚಿತ್ರ ನಟನ ಸಾವು ಅಭಿಮಾನಿ ಜನರ ನೆನಪಿನಿಂದ ದೂರಾಗುವ ಹೊತ್ತಿನಲ್ಲೇ ‘ಸುಮಲತಾ ಅಂಬರೀಷ್' ಎಂಬ ಹೆಸರು ಪತ್ರಿಕೆಗಳಲ್ಲಿ - ಮಾಧ್ಯಮಗಳಲ್ಲಿ ಪದೇ ಪದೇ ಪ್ರಸ್ತಾಪವಾಗುವುದರ ಮೂಲಕ ಅಂಬರೀಷ್ ಎಂಬ ರಾಜಕಾರಣಿ ಮತ್ತೆ ಮತ್ತೆ ನೆನಪಾಗುವಂತೆ ಮಾಡುತ್ತಿದ್ದೀರಿ. ಇನ್ನೇನು ಬರಲಿರುವ ಲೋಕಸಭಾ ಚುನಾವಣೆಗೆ ನಿಲ್ಲಲು ತಾವು ತಯಾರಿ ನಡೆಸುತ್ತಿದ್ದೀರಿ ಎಂಬ ಮಾಹಿತಿ ಪತ್ರಿಕೆಗಳ ಮೂಲಕ ಅರಿವಾಯಿತು. 

ಸುತ್ತಿಬಳಸಿ ಮಾತನಾಡುವ ಬದಲು ನೇರವಾಗಿ ಮುಖ್ಯ ವಿಷಯಕ್ಕೇ ಬರುವುದಾದರೆ ಅಂಬರೀಷ್ ರ ಮಡದಿ ಎಂಬುದೊಂದು ಅಂಶದ ಹೊರತಾಗಿ ಮಂಡ್ಯದಿಂದ ಲೋಕಸಭೆಗೆ ಸ್ಪರ್ಧಿಸುವ ಬೇರಾವ ಅರ್ಹತೆ ನಿಮ್ಮಲ್ಲಿದೆ? ಹೌದು, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಚುನಾವಣೆಗೆ ಸ್ಪರ್ಧಿಸುವ ಹಕ್ಕಿದೆ, ಸಹಜವಾಗಿಯೇ ಆ ಹಕ್ಕು ನಿಮಗೂ ಇದೆ. ಅಂಬರೀಷ್ ರ ಮಡದಿಯಾಗಿರದೆ ಹೋಗಿದ್ದರೂ ನೀವು ಚುನಾವಣೆಗೆ ಸ್ಪರ್ಧಿಸುವ ಮನಸ್ಸು ಮಾಡುತ್ತಿದ್ದಿರಾ? ಅಂಬರೀಷ್ ಬದುಕಿದ್ದರೆ ಚುನಾವಣೆಗೆ ನೀವು ನಿಲ್ಲುತ್ತಿದ್ದಿರಾ? ಅಂಬರೀಷ್ ಸಾವಿನ ಸೂತಕದ ಸಂತಾಪದ ಲಾಭ ಪಡೆದು ಗೆಲುವು ಪಡೆಯುವುದಷ್ಟೇ ನಿಮ್ಮ ಉದ್ದೇಶವಾಗಿದೆ ಎಂಬ ಭಾವನೆ ಮೂಡಿದರದು ತಪ್ಪೇ? 

ಫೆಬ್ರ 1, 2019

ತಮಿಳುನಾಡಿನ ರಾಜಕಾರಣದಲ್ಲಿ ಹೊಸ ಮೈತ್ರಿಕೂಟ ರಚನೆಯಾಗುತ್ತದೆಯೇ?

ಕು.ಸ.ಮಧುಸೂದನರಂಗೇನಹಳ್ಳಿ
ತಮಿಳುನಾಡಿನ ಅಧಿಕಾರರೂಢಪಕ್ಷ ಎ.ಐ.ಎ.ಡಿ.ಎಂ.ಕೆ. ನಿದಾನವಾಗಿ ಬಾಜಪ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟದತ್ತ ಸರಿಯುತ್ತಿರುವ ಎಲ್ಲ ಲಕ್ಷಣಗಳೂ ಸ್ಪಷ್ಟವಾಗಿ ಗೋಚರವಾಗುತ್ತಿವೆ. ಬಾಜಪ ಸಹ ಇದಕ್ಕೆ ಪೂರಕವಾಗಿಯೇ ತನ್ನ ರಾಜಕಾರಣದ ದಾಳಗಳನ್ನು ಉರುಳಿಸುತ್ತಿದೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರದ ಗದ್ದುಗೆ ಏರುವುದು ಕಷ್ಟವೆಂಬುದು ಬಾಜಪಕ್ಕೆ ಮನವರಿಕೆಯಾಗಿದೆ. ಕೆಲತಿಂಗಳ ಹಿಂದೆ ನಡೆದ ಮದ್ಯಪ್ರದೇಶ, ರಾಜಾಸ್ಥಾನ, ಚತ್ತೀಸಗಡ ಮೂರು ರಾಜ್ಯಗಳ ವ್ಯತಿರಿಕ್ತ ಪಲಿತಾಂಶ, ದಿನದಿಂದ ದಿನಕ್ಕೆ ಗಟ್ಟಿಯಾಗುವತ್ತ ನಡೆದಿರುವ ವಿರೋಧಪಕ್ಷಗಳ ಮಹಾಮೈತ್ರಿಯ ಮಾತುಗಳು, ಉತ್ತರಪ್ರದೇಶದಲ್ಲಿ ಬಹುಜನಪಕ್ಷ ಮತ್ತು ಸಮಾಜವಾದಿ ಪಕ್ಷಗಳ ನಡುವೆ ನಡೆದ ಸ್ಥಾನ ಹೊಂದಾಣಿಕೆಯ ಅಂತಿಮ ಪ್ರಕ್ರಿಯೆ, ಕೊಲ್ಕೊತ್ತಾದಲ್ಲಿ ತೃಣಮೂಲ ಕಾಂಗ್ರೇಸ್ಸಿನ ನಾಯಕಿ ಕುಮಾರಿ ಮಮತಾ ಬ್ಯಾನರ್ಜಿ ಆಯೋಜಿಸಿದ್ದ ವಿರೋಧಪಕ್ಷಗಳ ಬೃಹತ್ ರ್ಯಾಲಿ, ಉತ್ತರ ಪ್ರದೇಶದ ರಾಜಕಾರಣಕ್ಕೆ ಕಾಂಗ್ರೇಸ್ಸಿನ ಪ್ರಿಯಾಂಕಗಾಂದಿ ಪ್ರವೇಶಿಸಿರುವುದು ಬಾಜಪ ನಾಯಕರುಗಳ ನಿದ್ದೆಗೆಡಿಸಿರುವುದು ನಿಜ. ಇದರ ಜೊತೆಗೆ ಅದರ ಕೆಲವು ಮಿತ್ರಪಕ್ಷಗಳು ದೂರವಾಗಿವೆ. ಆಂದ್ರಪ್ರದೇಶದ ತೆಲುಗುದೇಶಂ ಹಾಗು ಜಮ್ಮು ಕಾಶ್ಮೀರದ ಪಿ.ಡಿ.ಪಿ. ಪಕ್ಷಗಳು ಈಗಾಗಲೇ ಎನ್.ಡಿ.ಎ. ಮೈತ್ರಿಕೂಟದಿಂದ ಹೊರಬಂದಿವೆ.ಮಹಾರಾಷ್ಟ್ರದಲ್ಲಿ ಶಿವಸೇನೆ ಬಾಜಪದ ವಿರುದ್ದ ಸ್ವತಂತ್ರವಾಗಿ ಸ್ಪರ್ದಿಸುವುದಾಗಿ ಹೇಳಿಕೊಂಡಿದೆ. ಈ ನಡುವೆ ಬಿಹಾರದ ಮುಖ್ಯಮಂತ್ರಿಗಳಾದ ಸಂಯುಕ್ತ ಜನತಾದಳದ ಶ್ರೀ ನಿತೀಶ್ ಕುಮಾರ್ ತ್ರಿವಳಿ ತಲಾಖ್ ಮತ್ತು ಪೌರತ್ವ ಮಸೂದೆಗಳ ಬಗೆಗಿನ ಕೇಂದ್ರ ಸರಕಾರದ ನೀತಿಗಳನ್ನು ನೇರವಾಗಿಯೇ ಟೀಕಿಸುತ್ತಿದ್ದಾರೆ. ಈಗಾಗಲೇ ಬಾಜಪದೊಂದಿಗೆ ಮಾಡಿಕೊಂಡಿರುವ ಸ್ಥಾನ ಹೊಂದಾಣಿಕೆಯ ಕರಾರನ್ನು ಕೊನೆಗಳಿಗೆಯಲ್ಲಿ ಅವರು ಮುರಿದರೂ ಅಚ್ಚರಿಯೇನೂ ಇಲ್ಲ.