
ಇದೇ ಭಾನುವಾರ ಬಿಡುಗಡೆಯಾಗಲಿರುವ ಲಡಾಯಿ ಪ್ರಕಾಶನ ಪ್ರಕಟಿಸಿರುವ ಕ್ರಾಂತಿ ಜ್ಯೋತಿ ಸಾವಿತ್ರಿ ಬಾಯಿ ಫುಲೆ ಪುಸ್ತಕದ ಲೇಖಕಿ ಡಾ. ಹೆಚ್. ಎಸ್. ಅನುಪಮ ಮಾತುಗಳು.
ಭೂ ತಾಪಮಾನ ಏರುತ್ತಿದೆ. ಕೆರೆಕಟ್ಟೆ ಬಾವಿ ಹಳ್ಳತೊರೆಗಳಷ್ಟೇ ಅಲ್ಲ, ಮನುಷ್ಯನ ಅಂತರಾಳದ ಜೀವಸೆಲೆಯೂ ಒಣಗತೊಡಗಿದೆ. ವಿಷಪೂರಿತ ತ್ಯಾಜ್ಯಗಳಿಂದ ಪವಿತ್ರ ನದಿಗಳಷ್ಟೇ ಅಲ್ಲ, ಒಳ ಹರಿವ ಅಂತರಗಂಗೆಯೂ ಮಲಿನಗೊಂಡಿದೆ. ವಿಶ್ವದೆಲ್ಲೆಡೆ ಮಕ್ಕಳು, ಹೆಣ್ಮಕ್ಕಳು, ದುರ್ಬಲರ ಮೇಲೆ ದಾಳಿಯಾಗುತ್ತ ಜನಸಾಮಾನ್ಯರನ್ನು ಭಯಗ್ರಸ್ತ ಸ್ಥಿತಿಯಲ್ಲಿಡುವುದೇ ಹೋರಾಟ ಎಂದು ಕರೆಸಿಕೊಳ್ಳುತ್ತಿದೆ. ವೈಚಾರಿಕ ಜಾಗೃತಿ ಮೂಡಿಸಬೇಕಾದ ಆಧುನಿಕ ಶಿಕ್ಷಣ ಜನರನ್ನು ಮೂಢನಂಬಿಕೆಗಳಿಗೆ ಜೋತುಬೀಳುವಂತೆ ಮಾಡುತ್ತಿದೆ. ಶಿಕ್ಷಣ ಮೂಲಭೂತ ಹಕ್ಕು ಎನ್ನುವ ಹೊತ್ತಿಗೆ ಅದು ಖಾಸಗೀಕರಣಗೊಂಡಿದೆ. ನಗರ ಪ್ರದೇಶಗಳಲ್ಲಿ ಶಿಕ್ಷಣಸಂಸ್ಥೆ ತೆರೆಯುವುದೇ ಒಂದು ಉದ್ಯಮವಾಗಿ ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸುವವರು ಶಿಕ್ಷಣತಜ್ಞರೆನಿಸಿಕೊಂಡಿದ್ದಾರೆ!