ಸಾಕೇತ್ ರಾಜನ್
ಕನ್ನಡಕ್ಕೆ: ಡಾ. ಅಶೋಕ್. ಕೆ. ಆರ್
ಇ. ಭೂಭಾಗದ ಸರಿಯಾದ ಉಪಯೋಗ
ಬೆಳಗಾವಿ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಭಾಗಗಳನ್ನೊಳಗೊಂಡಿದ್ದ ಕಿತ್ತೂರು ಸಂಸ್ಥಾನದ ಪಶ್ಚಿಮ ಭಾಗದಲ್ಲಿ ಮಲೆನಾಡಿನ ಅರಣ್ಯ ಪ್ರದೇಶವಿತ್ತು. ಇನ್ನಿತರ ದಿಕ್ಕುಗಳು ಪಕ್ಕದ ದೇಶಗಳಿಗೆ ತೆರೆದುಕೊಂಡಿತ್ತು. ಚೆನ್ನಮ್ಮಳ ಹೋರಾಟ ಪ್ರಾರಂಭವಾದಾಗಲೂ ಬ್ರಿಟೀಷರಿಗೆ ಕಿತ್ತೂರಿನ ಮಲೆನಾಡಿನಲ್ಲಿ ಸೋಲುಂಟಾಗಬಹುದೆಂಬ ಭಯವಿತ್ತು. ಹಾಗಾಗ್ಯೂ, ರಾಣಿ ಮತ್ತವಳ ಮಂತ್ರಿಗಳ ಊಳಿಗಮಾನ್ಯ ಮನಸ್ಥಿತಿ ಭೂಭಾಗದ ಸರಿಯಾದ ಉಪಯೋಗವನ್ನು ತಡೆದುಬಿಟ್ಟಿತು. ಆದರೂ, ಬ್ರಿಟೀಷರು ಈ ಪ್ರದೇಶದ ಬಗ್ಗೆ ಪದೇ ಪದೇ ತೋರಿದ ಆತಂಕ 1829 – 30ರಲ್ಲಿ ಸತ್ಯವಾಯಿತು. ಕಿತ್ತೂರಿನ ಬಂಡಾಯದ ಬಗ್ಗೆ ಬರೆದ ಮೊದಲ ಟಿಪ್ಪಣಿಯಲ್ಲೇ ಎಲ್ಫಿನ್ ಸ್ಟೋನ್: “……ಕಿತ್ತೂರು ಜಾಗೀರುದಾರರ ಭೂಮಿಯ ಮಧ್ಯದಲ್ಲಿದೆ, ಕೊಲ್ಲಾಪುರದಿಂದಾಗಲೀ ಅಥವಾ ವಾರೀಯಿಂದಾಗಲೀ ಹೆಚ್ಚು ದೂರವೇನಿಲ್ಲ, ಮತ್ತು ನಮ್ಮ ಮತ್ತು ಪೋರ್ಚುಗೀಸರ ಪ್ರಾಂತ್ಯದ ಮಧ್ಯೆ ಇರುವ ಕಾಡು ಗುಡ್ಡಗಳ ಸಮೀಪದಲ್ಲಿದೆ. ಈ ಕಾರಣಗಳಿಂದ, ಅರಣ್ಯ ಯುದ್ಧವಿಲ್ಲಿ ದೀರ್ಘಕಾಲೀನವಾಗುವ ಪರಿಸ್ಥಿತಿಯುಂಟಾಗಬಹುದು ಮತ್ತು ಆ ಯುದ್ಧ ಹೆಚ್ಚೆಚ್ಚು ಕಡೆಗೆ ಹರಡುತ್ತದೆ, ಅತಿ ಶೀಘ್ರವಾಗಿ ನಿಯಂತ್ರಿಸದಿದ್ದರೆ”. (69)