ಕು.ಸ.ಮಧುಸೂದನ ರಂಗೇನಹಳ್ಳಿ
ಇವತ್ತು ಇಂಡಿಯಾದಲ್ಲಿನ ಸಾರ್ವತ್ರಿಕ ಚುನಾವಣೆಗಳು ತಮ್ಮ ಸಾಂಪ್ರದಾಯಿಕ ಮೌಲ್ಯ ಮತ್ತು ಮಹತ್ವವನ್ನು ಕಳೆದು ಕೊಳ್ಳುತ್ತಿವೆಯೆಂದರೆ ತಪ್ಪಾಗಲಾರದು. ಹಾಗೆಂದು ಕಳೆದ ಏಳು ದಶಕಗಳಲ್ಲಿ ನಡೆದ ಎಲ್ಲ ಚುನಾವಣೆಗಳ ಬಗ್ಗೆಯೂ ಈ ಮಾತು ಹೇಳಲಾಗದು.
ಆದರೆ ತೊಂಭತ್ತರ ದಶಕದ ನಂತರದಲ್ಲಿ ನಡೆದ ಬಹುತೇಕ ಚುನಾವಣೆಗಳು ತಮ್ಮ ಮೂಲ ಸ್ವರೂಪವನ್ನು ಕಳೆದುಕೊಂಡು ಒಂದು ಬೃಹತ್ ಸಂತೆಯ ಸ್ವರೂಪ ಪಡೆದುಕೊಂಡಿವೆ. ಬದಲಾದ ಆರ್ಥಿಕ ನೀತಿಯ ಫಲವಾಗಿ ಪ್ರವರ್ದಮಾನಕ್ಕೆ ಬಂದ ಎಲೆಕ್ಟ್ರಾನಿಕ್ ಮಾಧ್ಯಮಗಳು ಒಂದು ದೊಡ್ಡ ಉದ್ದಿಮೆಯಾಗಿ ಬೆಳೆದು ನಿಂತಿತು. ಆಗ ನಾಯಿಕೊಡೆಗಳಂತೆ ಹುಟ್ಟಿಕೊಂಡ ಇಂಗ್ಲೀಷ್ ಮತ್ತು ಪ್ರಾದೇಶಿಕ ಭಾಷೆಗಳ ದೃಶ್ಯ ಮಾಧ್ಯಮಗಳು ನಮ್ಮ ಇಡೀ ಚುನಾವಣೆಯ ಪ್ರಕ್ರಿಯೆಯನ್ನು ಹೈಜಾಕ್ ಮಾಡಿಬಿಟ್ಟಿವೆ.
ಇನ್ನೂ ಸ್ಪಷ್ಟವಾಗಿ ಹೇಳುವುದಾದಲ್ಲಿ, ನಮ್ಮ ಸಮೂಹ ಮಾದ್ಯಮಗಳು (ಮುಖ್ಯವಾಗಿ ಎಲೆಕ್ಟ್ರಾನಿಕ್ ಮಾದ್ಯಮಗಳು) ಇಡೀ ದೇಶವನ್ನು ಒಂದು ಮಾರುಕಟ್ಟೆಯನ್ನಾಗಿಸಿ (ನಗರದ ಬಾಷೆಯಲ್ಲಿ ಹೇಳುವುದಾದರೆ ಮಾಲ್ ಅನ್ನಾಗಿಸಿ) ಮತದಾರರನ್ನು ಗ್ರಾಹಕರನ್ನಾಗಿಸಿ, ರಾಜಕೀಯ ಪಕ್ಷಗಳು, ಮತ್ತವುಗಳ ನಾಯಕರುಗಳನ್ನು ಮಾರಾಟದ ಸರಕುಗಳನ್ನಾಗಿಸಿ ಬಿಟ್ಟಿವೆ. ಇದಕ್ಕೆ ಕಾರಣವೂ ಸ್ಪಷ್ಟ: ಮುಕ್ತ ಆರ್ಥಿಕ ನೀತಿಯ ನಂತರ ಪ್ರಾರಂಭವಾದ ಬಹುತೇಕ ಸುದ್ದಿವಾಹಿನಿಗಳು ಒಂದಲ್ಲಾ ಒಂದು ಕಾರ್ಪೋರೇಟ್-ಬಂಡವಾಳಶಾಹಿಗಳ ಒಡೆತನದಲ್ಲಿವೆ. ಅಂತಹ ಬಲಾಢ್ಯ ಶಕ್ತಿಗಳು ತಮ್ಮ ಹಿತಾಸಕ್ತಿಯನ್ನು ಕಾಪಾಡುವ ರಾಜಕೀಯ ಪಕ್ಷಗಳ ಮತ್ತು ಅವುಗಳ ನಾಯಕರುಗಳನ್ನು ತಮ್ಮ ಮಾಧ್ಯಮಗಳ ಮೂಲಕ ಪ್ರಮೋಟ್ ಮಾಡುತ್ತ, ಚುನಾವಣೆಗಳನ್ನು, ಮತ್ತದರ ಪಲಿತಾಂಶಗಳನ್ನು ತಮಗೆ ಬೇಕಾದ ರೀತಿಯಲ್ಲಿ ಬರುವಂತೆ ನೋಡಿಕೊಳ್ಳುವ ಪ್ರಯತ್ನದಲ್ಲಿವೆ. ತಮಗೆ ಬೇಕಾದ ಪಕ್ಷಗಳು,ನಾಯಕರುಗಳನ್ನು ಬಣ್ಣಬಣ್ಣದ ಜಾಹಿರಾತುಗಳ ಮೂಲಕ ಪರಿಣಾಮಕಾರಿಯಾಗಿ ಬಿಂಬಿಸುತ್ತ ಮತದಾರರಿಗೆ ಮಾರುತ್ತಿದ್ದಾರೆ. ಇದರ ಕಾರ್ಯವೈಖರಿ ಹೀಗಿದೆ: