ಕು.ಸ.ಮಧುಸೂದನ ರಂಗೇನಹಳ್ಳಿ
ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಮೇಯರ್ ಸ್ಥಾನ ಕನ್ನಡೇತರರ ಪಾಲಾಗಿರುವ ಹಿನ್ನೆಲೆಯಲ್ಲಿ ‘ಕನ್ನಡಿಗ’ರೆಂದರೆ ಯಾರು? ಕನ್ನಡಿಗ ಎಂದು ಹೇಳಲು ಇರುವ ಮಾನದಂಡವೇನು ಎಂಬುದರ ಬಗ್ಗೆ ಬಿಸಿಬಿಸಿ ಚರ್ಚೆಗಳು ನಡೆಯುತ್ತಿರುವ ಈ ಸನ್ನಿವೇಶದಲ್ಲಿಯೇ ಕನ್ನಡ ಭಾಷಿಕ ಜನಾಂಗ ತನ್ನನ್ನು ತಾನು ಆಳಿಕೊಳ್ಳಲು ಸಶಕ್ತವಾಗಿದೆಯೇ ಮತ್ತು ಅದಕ್ಕೆ ಬೇಕಾಗಿರುವುದು ಏನು ಎಂಬುದರ ಬಗ್ಗೆ ಒಂದಿಷ್ಟು ಚಿಂತನೆ ಮಾಡಬೇಕಾದ ಅನಿವಾರ್ಯತೆ ಬಂದೊದಗಿದೆ
ನಿಜವಾದ ಅರ್ಥದಲ್ಲಿ ಇವತ್ತು ಕನ್ನಡ ಚಳುವಳಿಗಳು ಸಂಪೂರ್ಣವಾಗಿ ಸ್ಥಗಿತಗೊಂಡಂತೆ ಕಾಣುತ್ತಿವೆ. ಇಂತಹ ಚಳುವಳಿಗಳ ಆತ್ಮವಾಗಿರಬೇಕಾಗಿದ್ದ ಅಕ್ಷರಸ್ಥ ಮದ್ಯಮವರ್ಗ ಸ್ವತ: ಜಡಗೊಂಡಿರುವ ಈ ಸನ್ನಿವೇಶದಲ್ಲಿ ನಮ್ಮ ಕನ್ನಡ ಚಳುವಳಿ ಸಹ ನಿಸ್ತೇಜಗೊಂಡಂತೆ ನಮಗೆ ಭಾಸವಾಗುತ್ತಿದ್ದರೆ ಅಚ್ಚರಿಯೇನಲ್ಲ. ಇಂತಹ ನಿರಾಶಾದಾಯಕ ಸನ್ನಿವೇಶದಲ್ಲಿಯೂ ಕನ್ನಡ ಚಳುವಳಿಯ ಕುರಿತು ಒಂದಿಷ್ಟು ಆಶಾಬಾವನೆ ಒಡಮೂಡಿದ್ದು ಕೆಲವರ್ಷಗಳ ಹಿಂದೆ ನಡೆದ ಕಳಸಾ ಬಂಡೂರಿ ಮತ್ತು ಕಾವೇರಿ ನದಿ ನೀರಿನ ಹಂಚಿಕೆಯ ವಿವಾದಗಳ ಬಗ್ಗೆ ನಡೆದ ಹೋರಾಟದ ಕ್ಷಣದಲ್ಲಿ ಮಾತ್ರ.
ಹಾಗೆ ನೋಡಿದರೆ ನಾವು ಕನ್ನಡ ಚಳುವಳಿಯ ಒಟ್ಟು ಅರ್ಥವನ್ನೇ ಸಂಕುಚಿತಗೊಳಿಸಿ ನೋಡುವ ವಿಷಯದಲ್ಲಿಯೇ ಎಡವಿದ್ದೇವೆ. ಯಾಕೆಂದರೆ ಕನ್ನಡ ಚಳುವಳಿ ಎಂದರೆ ಅದು ಕೇವಲ ಕನ್ನಡ ಬಾಷೆಗೆ ಸೀಮಿತವಲ್ಲ. ಬದಲಿಗೆ ಕರ್ನಾಟಕದ ನೆಲ, ಜಲ, ಬಾಷೆ, ನೈಸರ್ಗಿಕ ಸಂಪನ್ಮೂಲಗಳೂ ಸೇರಿದಂತೆ ಒಟ್ಟು ಕನ್ನಡ ನಾಡಿನ ಚಳುವಳಿಯೇ ನಿಜವಾದ ಕನ್ನಡ ಚಳುವಳಿ! ಆದರೆ ಇದುವರೆಗು ನಡೆದ ಕನ್ನಡ ಚಳುವಳಿಗಳು ಕೇವಲ ಬಾಷಿಕ ಚಳುವಳಿಗಳಾಗಿ: ಆಡಳಿತ ಬಾಷೆ ಕನ್ನಡವಾಗಬೇಕು, ಕನ್ನಡ ಮಾದ್ಯಮದಲ್ಲಿ ಶಿಕ್ಷಣ ನೀಡಬೇಕು, ನಾಮಫಲಕಗಳು ಕನ್ನಡದಲ್ಲಿ ಇರಬೇಕೆಂಬ ಬೇಡಿಕೆಗಳಿಗೆ ಮಾತ್ರ ಸೀಮಿತವಾಗಿ ನಡೆಯುತ್ತ ಬಂದಿವೆ. ಇಂತಹ ಏಕಮುಖ ಚಳುವಳಿಯ ಅಪಾಯವೆಂದರೆ ಕನ್ನಡ ಚಳುವಳಿ ಏಕಾಕಿಯಾಗಿ ಉಳಿದುಬಿಡುವುದು ಮತ್ತು ಕನ್ನಡದ ನೆಲ, ಜಲ, ಸಂಪನ್ಮೂಲಗಳ ವಿಷಯ ತನಗೆ ಸಂಬಂದಿಸಿದ್ದಲ್ಲವೆಂಬ ಅಭಿಪ್ರಾಯ ಬೆಳೆಸಿಕೊಂಡು ಬಿಡುವುದಾಗಿದೆ. ಹೀಗಾದಾಗ ಇಡಿ ಕನ್ನಡ ಚಳುವಳಿ ಕೇವಲ ಭಾಷಾ ದುರಭಿಮಾನದ ಸಂಕೇತವಾಗಿ ಮಾತ್ರ ಉಳಿದು ಬಿಡುವ ಅಪಾಯವಿದೆ.