ಡಾ. ಅಶೋಕ್. ಕೆ. ಆರ್.
ರಾಜೀವ ಮೊದಲು ನಾನ್ಯಾಕೆ ಮದುವೆಗೆ? ನೀ ಬೆಳಿಗ್ಗೆ ಹೋಗಿ ಬಂದುಬಿಡು ಸಂಜೆಯಷ್ಟೊತ್ತಿಗೆ ಎಂದು ರಾಗ ಎಳೆದನಾದರೂ ʼನಡೀರಿ. ಹಂಗೆ ಒಂದೆರಡ್ ದಿನ ಸುತ್ತಾಡ್ಕಂಡ್ ಬರೋಣ. ಅದೇ ಕೆಲಸ ಅದೇ ಮನೆ ಅದದೇ ಜಗಳಗಳು ಬೋರಾಗೋಗಿದೆʼ ಅಂದಿದ್ದಕ್ಕೆ ನಕ್ಕು "ಬೆಂಗಳೂರಿನವರೇ ಇತ್ಲಾಕಡೆಗೆ ಬರ್ತಾರೆ ಸುತ್ತೋಕೆ. ನಾವಿನ್ನೆಲ್ಲಿ ಅಲ್ಲಿ ಸುತ್ತೋದು?" ಎಂದರು.
ʼಬೆಂಗಳೂರಿಂದ ಇನ್ನೂರ್ ಇನ್ನೂರೈವತ್ ಕಿಲೋಮೀಟ್ರು ದೂರದಲ್ಲಿ ಯರ್ಕಾಡ್ ಅಂತ ಯಾವ್ದೋ ಜಾಗ ಇದ್ಯಂತೆ. ಚೆನ್ನಾಗಿದೆ ಅಂತಿದ್ರು. ಮದುವೆ ಮುಗ್ಸಿ ಮಧ್ಯಾಹ್ನ ಹೊರಟರೆ ರಾತ್ರಿ ತಲುಪಬಹುದು. ರಾತ್ರಿ ಇದ್ದು ಮಾರನೇ ದಿನ ಅಲ್ಲೇನೇನಿದ್ಯೋ ನೋಡಿಕೊಂಡು ಸಂಜೆಯಂಗೊರಡೋಣ. ಆದ್ರೆ ಅವತ್ತೇ ಮೈಸೂರು ತಲುಪೋಣ. ಇಲ್ಲ ಬೆಂಗಳೂರಲ್ಲಿ ನನ್ ಕಸಿನ್ ಮನೇಲಿದ್ದು ಮಾರನೇ ದಿನ ಹೊರಟರಾಯಿತುʼ
"ಅಷ್ಟೆಲ್ಲ ರಜ ಸಿಗುತ್ತಾ ನಿನಗೆ"
ʼಎಲ್ರೀ! ರಜಾನೇ ಹಾಕಿಲ್ಲ ನಾನು. ಅಕಸ್ಮಾತ್ ರಾಧ ಹುಷಾರು ತಪ್ಪಿದರೆ ಅಂತ ಇರೋ ಚೂರುಪಾರು ರಜೆಗಳನ್ನೆಲ್ಲ ಹಂಗೇ ಇಟ್ಟುಕೊಂಡಿದ್ದೀನಿ. ನಿಮಗೆ ಸಿಗುತ್ತಾ?ʼ
"ನಂದೇನ್ ಲಾರ್ಡ್ ಲಬಕ್ ದಾಸ್ ಕೆಲಸ ನೋಡು. ರಜ ಸಿಗದೇ ಹೋದ್ರೆ ರಾಜೀನಾಮೆ ಬಿಸಾಕ್ ಬರೋದಪ್ಪ"
ʼಈ ಅದದೇ ಮಾತುಗಳು ಮರೆಯಾಗ್ಲಿ ಅಂತಲೇ ಈ ಚಿಕ್ಕ ಟ್ರಿಪ್ಪು. ಅಪ್ಪಿ ತಪ್ಪಿ ರಾಜೀನಾಮೆ ಕೊಟ್ಬಿಟ್ಟೀರಾ ಮತ್ತೆ ಈಗ. ನನ್ ಪಿಜಿ ಮುಗಿಯೋವರ್ಗಾದ್ರೂ ಕಾಯಿರಿʼ
"ಅದಕ್ಕೇ ಕಾಯ್ತಿರೋದು ನಾನು" ಅಂತ ಕಣ್ಣು ಹೊಡೆದರು.