ಒಂದರ್ಧ ಘಂಟೆ ಕಾಲ ಮಾತ್ರ ಯೋಚನೆಗಳು ಬಿಡುವು ಕೊಟ್ಟಿತ್ತು.
ನನ್ನ ರಾಮ್ಪ್ರಸಾದ್ ಮಧ್ಯೆ ಯಾವುದೇ ಸಂಬಂಧವಿಲ್ಲವೆಂದು ರಾಜೀವನಲ್ಲಿ ನಂಬುಗೆ ಮೂಡಿಸುವುದೇಗೆ? ಯಾರೋ ಯಾವ ಕಾರಣಕ್ಕೋ ನಮ್ಮಿಬ್ಬರ ಮಧ್ಯೆ ಸಂಬಂಧವಿದೆ ಎಂದು ಸುಳ್ಳುಸುಳ್ಳೇ ಆರೋಪ ಮಾಡಿಬಿಟ್ಟರು. ಅದು ನಿಜವಲ್ಲ ಎಂದು ಸಾಬೀತುಪಡಿಸುವ ಅನಿವಾರ್ಯ ಕರ್ಮ ನನ್ನ ಹೆಗಲೇರಿಬಿಟ್ಟಿದೆ. ರಾಮ್ಪ್ರಸಾದ್ ಜೊತೆ ಹಿಂಗಿಂಗೆ ಅಂತೇಳಿ ಅವರೇ ಸಮಜಾಯಿಷಿ ಕೊಡುವಂತೆ ಹೇಳಲಾ? ಪಾಪ! ಅವರಿಗಾದರೂ ಈ ರೀತಿಯೆಲ್ಲ ನಮ್ಮ ಬಗ್ಗೆ ಆಸ್ಪತ್ರೆಯಲ್ಲಿ ಮಾತನಾಡಿಕೊಳ್ಳುತ್ತಾರೆ ಎನ್ನುವುದು ಗೊತ್ತೋ ಇಲ್ಲವೋ.... ಒಂದು ವೇಳೆ ಗೊತ್ತಿದ್ದರೂ ಸುಮ್ಮನಿದ್ದುಬಿಟ್ಟಿದ್ದರೆ? ಆ ಮಾತುಗಳೇ ಅವರಿಗೂ ಪ್ರಿಯವಾಗಿಬಿಟ್ಟಿದ್ದರೆ? ಅವರೇ ಈ ಗಾಳಿ ಸುದ್ದಿಗಳನ್ನು ಹಬ್ಬಿಸಿದ್ದರೆ? ಇಲ್ಲಿಲ್ಲ. ಅವರ ವರ್ತನೆ ಒಂದು ದಿನಕ್ಕೂ ನನಗೆ ಅನುಮಾನ ಮೂಡಿಸಿಲ್ಲ. ಆದರೂ ಅವರ ಮೂಲಕ ರಾಜೀವನಿಗೆ ಸಮಜಾಯಿಷಿ ಕೊಡುವುದು ಸರಿಯಾಗಲಾರದು. ನಮ್ಮಿಬ್ಬರ ನಡುವಿನ ವಿಷಯ, ನಮ್ಮ ಮನೆಯಲ್ಲಿ ನಡೆದ ವಿಷಯಗಳನ್ನೆಲ್ಲ ಅವನತ್ರ ತಗೊಂಡು ಹೋಗಿ ಹೇಳ್ಕೋತೀಯ ಅಂತ ಮತ್ತೊಂದು ಸುತ್ತು ಜಗಳ ಶುರುವಾಗಿಬಿಡಬಹುದು. ಅಲ್ಲ, ನನಗೆ ನಿಜಕ್ಕೂ ಒಂದು ಅನೈತಿಕ.... ಅನೈತಿಕವಲ್ಲ.... ಮದುವೆಯಾಚೆಗಿನ ಸಂಬಂಧ ಅಂಥ ಇದ್ದದ್ದು ಸಾಗರನೊಟ್ಟಿಗೆ ಮಾತ್ರ. ಸಾಗರ ನಮ್ಮ ಮನೆಗೆ ಬಂದು ರಾಜೀವನನ್ನು ಭೇಟಿಯಾದಾಗ, ನಾವವನ ಮದುವೆಗೆಂದು ಹೋಗಿದ್ದಾಗ ನಮ್ಮಿಬ್ಬರ ಮುಖಚರ್ಯೆಯನ್ನು ಗಮನಿಸಿಬಿಟ್ಟಿದ್ದರೇ ಸಾಕಿತ್ತು ಇಬ್ಬರ ನಡುವೆ ಸಂಬಂಧವಿದೆ ಎನ್ನುವುದು ತಿಳಿದು ಹೋಗುತ್ತಿತ್ತು. ನನ್ನ ಸಾಗರನ ಸಂಬಂಧವನ್ನು ಸ್ನೇಹವೆಂದೇ ಇವತ್ತಿಗೂ ನಂಬಿರುವ - ಆ ಸ್ನೇಹ ಸತ್ತು ಎಷ್ಟು ತಿಂಗಳುಗಳಾಯಿತು? - ರಾಜೀವ ನನ್ನ ರಾಮ್ನ ಸ್ನೇಹವನ್ನು, ಅದೂ ಅವರಿಂದಾಗಿಯೇ ಬಲವಂತವಾಗೆಂಬಂತೆ ಹುಟ್ಟಿದ ಸ್ನೇಹವನ್ನು ಅನುಮಾನಿಸುತ್ತಿದ್ದಾರಲ್ಲ? ಸಾಗರನ ಜೊತೆಗಿದ್ದಾಗಲೇ ಈ ಅನುಮಾನ ಇವರಲ್ಲಿ ಬಂದುಬಿಟ್ಟಿದ್ದರೆ ಅಚ್ಚುಕಟ್ಟಾಗಿ ಡೈವೋರ್ಸ್ ತೆಗೆದುಕೊಂಡು ಸಾಗರನನ್ನು ಮದುವೆಯಾಗಿಬಿಡಬಹುದಿತ್ತು. ಸಾಗರ ಕೂಡ ಒಂದಷ್ಟು ಪೊಸೆಸಿವ್ವೇ ಹೌದು. ತೀರ ಪುರುಷೋತ್ತಮನಷ್ಟಲ್ಲ, ಆದರೂ ಪೊಸೆಸಿವ್ವೇ. ಜೊತೆಗೆ ನನ್ನ ಮೇಲೆ ಬೆಟ್ಟದಷ್ಟು ಅನುಮಾನ ಬೇರೆ ಇದೆ ಅವನಿಗೆ. ಮದುವೆಯಾಗಿ ಬೇರೆ ಕಡೆ ಸಂಬಂಧ ಬೆಳೆಸುವವರ ಮೇಲೆ ಇಂತಹ ಅನುಮಾನ ಸಹಜವೋ ಏನೋ. ಯೋಚನೆಗಳಿಗೆ ತಡೆಹಾಕಿದ್ದು ಶಶಿಯ ಆಗಮನ. ಮನೆಯಲ್ಲಿನ ಮೌನದಲ್ಲಿದ್ದ ಅಸಹಜತೆಯ ವಾಸನೆ ಅವನಿಗೂ ಬಡಿಯಲೇಬೇಕಲ್ಲ.
"ಏನಾಯ್ತು? ಎಲ್ಲಿ ಎಲ್ಲ"
ʻಎಲ್ರೂ ಅವರವರ ರೂಮುಗಳಲ್ಲಿ ಸೇರಿಕೊಂಡಿದ್ದಾರೆʼ